ನವದೆಹಲಿ ಮೇ.22: ಕೊರೊನಾ ಲಾಕ್ ಡೌನ್ ಮತ್ತು ಕೇಂದ್ರ ಸರ್ಕಾರ ತೋರುತ್ತಿರುವ ಅಸಹಕಾರ, ತೆಗೆದುಕೊಳ್ಳುತ್ತಿರುವ ಏಕಮುಖಿ ನಿರ್ಧಾರಗಳನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಇಂದು ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದು, ಈ ಮಹತ್ವದ ಸಭೆ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಈ ಸಭೆಯು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದ್ದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೂರೇನ್, ತಮಿಳುನಾಡಿನ ಪ್ರತಿಪಕ್ಷದ ನಾಯಕ ಎಂ.ಕೆ. ಸ್ಟಾಲಿನ್, ಎನ್ ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ಒಟ್ಟು 18 ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ.
ಇನ್ನು ಈ ಸಭೆಯಲ್ಲಿ ಮುಖ್ಯವಾಗಿ ಪ್ರಸಕ್ತ ಸಮಸ್ಯೆಗಳ ಹಾಗೂ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಬಗ್ಗೆ ಚರ್ಚೆಯಾಗಲಿದೆ.
ಲಾಕ್ ಡೌನ್ ಜಾರಿಯಲ್ಲಿದ್ದರೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಲಕ್ಷದ ಗಡಿ ದಾಟಿದೆ. ಸೋಂಕು ಹರಡುವಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರ ವಿರುದ್ಧ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂಬ ಚರ್ಚೆ ಸಭೆಯಲ್ಲಿ ನಡೆಯಲಿದೆ.
ಅಲ್ಲದೆ ವಲಸೆ ಕಾರ್ಮಿಕರ ವಿಷಯದಲ್ಲಿ ಕೇಂದ್ರ ಸರ್ಕಾರ ಸಾಲು ಸಾಲು ತಪ್ಪು ಮಾಡಿದೆ. ಮೊದಲ ಹಂತದ ಲಾಕ್ ಡೌನ್ ಜಾರಿಗೊಳಿಸಿದಾಗಲೇ ಅವರನ್ನು ಊರುಗಳಿಗೆ ಕಳುಹಿಸಲು ರೈಲುಗಳನ್ನು ಬಿಡಬಹುದಿತ್ತು. ಹಾಗೆ ಮಾಡದೆ ನೂರಾರು ಪ್ರಾಣ ಕಳೆದುಕೊಂಡಿದ್ದಾರೆ. ಈಗಲೂ ಸರಿಯಾದ ವ್ಯವಸ್ಥೆ ಮಾಡಿಲ್ಲ. ಈ ವಿಚಾರವಾಗಿಯೂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಸಭೆಯಲ್ಲಿ ಕೊರೊನಾ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ವಿರೋಧ ಪಕ್ಷಗಳ ಸಲಹೆಗಳಿಗೂ ಮನ್ನಣೆ ನೀಡುತ್ತಿಲ್ಲ. ಕೊರೊನಾದಂತಹ ಕಷ್ಟದ ಸಂದರ್ಭದಲ್ಲೂ ಒಮ್ಮುಖದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂಬ ಚರ್ಚೆ ನಡೆಯಲಿದೆ.