ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯ ಬಾಕಿ ಉಳಿದ ಒಂದು ಪರೀಕ್ಷೆಯ ಬಗ್ಗೆ ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ ನಂತರ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಈಗ ಕೊರೊನಾ ಸಂಕಷ್ಟ ಕಾಲವಾದ್ದರಿಂದ ಈಗ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಸೋಂಕು ಮುಗಿಯದೇ ಯಾವುದೇ ಕಾರಣಕ್ಕೂ ಪರೀಕ್ಷೆಗಳನ್ನು ನಡೆಸುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು ಸುದ್ದಿ ನಂಬಬೇಡಿ ಎಂದು ಮನವಿ ಮಾಡಿಕೊಂಡರು. ಅಲ್ಲದೆ ಪರೀಕ್ಷೆಗಳ ಮುಂದಿನ ದಿನಾಂಕಗಳ ಬಗ್ಗೆ ನಾನೇ ಖುದ್ದಾಗಿ ತಿಳಿಸುತ್ತೇನೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸುವ ಸಂಬಂಧ ಗಂಭೀರ ಯೋಚನೆ ನಡೆಸಿದ್ದೇವೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರಿಗೆ ಸೂಕ್ತ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಇನ್ನು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಕಾಶವಾಣಿ ಮತ್ತು ದೂರದರ್ಶನದ ಮೂಲಕ ಪುನರ್ ಮನನ ಕಾರ್ಯಕ್ರಮ ನೀಡುವ ಸಂಬಂಧ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುತ್ತದೆ ಎಂದ ಸುರೇಶ್ ಕುಮಾರ್, ಇದೇ ರೀತಿ ಎಲ್ಲ ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಅನುಕೂಲ ಆಗುವಂತೆ ಮುಂದಿನ ವಾರದಲ್ಲಿ ಯೂಟ್ಯೂಬ್ ಚಾನಲ್ ಆರಂಭಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.








