ಅಂಬೇಡ್ಕರ್ ಅವರ ಆಶಯವನ್ನು ಈಡೇರಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬದ್ಧ :ವಿ.ಸೋಮಣ್ಣ Ambedkar’s saaksha tv
ಬೆಂಗಳೂರು : ಗೋವಿಂದರಾಜ ನಗರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಡಾII ಬಿ.ಆರ್ ಅಂಬೇಡ್ಕರ್ ಅವರ 65ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಗೋವಿಂದರಾಜನಗರ ಕ್ಷೇತ್ರದ ಶಾಸಕರಾದ ವಿ.ಸೋಮಣ್ಣ ಅವರು ಪಾಲ್ಗೊಂಡರು.
ಬಳಿಕ ಮಾತನಾಡಿದ ಸಚಿವರು, ತಮ್ಮ ಜೀವನದುದ್ದಕ್ಕೂ ಅಸ್ಪೃಶ್ಯತೆ, ಜಾತಿ ಪದ್ಧತಿ, ಲಿಂಗಭೇದ, ಅಸಮಾನತೆ ವಿರುದ್ಧ ಹೋರಾಡಿ ಶೋಷಿತರ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಭೌತಿಕ ಶರೀರವನ್ನು ತ್ಯಜಿಸಿ ಮಹಾಪರಿನಿರ್ವಾಣ ಹೊಂದಿದ ದಿನವಿದು.
ಅವರು ತೋರಿಸಿ ಕೊಟ್ಟ ಹಾದಿಯಲ್ಲಿ ಅವರ ಯೋಚನೆ ಮತ್ತು ದೂರದೃಷ್ಟಿಯನ್ನು ಅರ್ಥಮಾಡಿಕೊಂಡು ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ತತ್ವದಡಿ ನವ ಸಮಾಜವನ್ನು ನಿರ್ಮಿಸುವ ಸಂಕಲ್ಪಕ್ಕೆ ನಾವೆಲ್ಲರೂ ಬದ್ಧರಾಗೋಣ.
ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರದಲ್ಲಿ ನಾನು ಸಮುದಾಯವೊಂದರ ಅಭಿವೃದ್ಧಿಯನ್ನು ಅಳೆಯುತ್ತೇನೆ ಎಂಬ ಅಂಬೇಡ್ಕರ್ ಅವರ ಆಶಯವನ್ನು ಈಡೇರಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬದ್ಧವಾಗಿವೆ.
ಶೋಷಿತರ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ಹೊಂದಿದ ಈ ದಿನ ಪವಿತ್ರವಾದದ್ದು. ದೇಶಕ್ಕೆ ಇಂಥ ಚೇತನವನ್ನು ಕೊಡುಗೆ ನೀಡಿದ ಅಂಬೇಡ್ಕರ್ ಅವರ ಪೋಷಕರಿಗೆ ನನ್ನ ನಮನಗಳು ಎಂದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಉಮೇಶ್ ಶೆಟ್ಟಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.