ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಆಟ ಮುಗೀತು ಎನ್ನುವ ಮಾತುಗಳು ಅಲ್ಲಲ್ಲಿ ಕೇಳಿ ಬರುತ್ತಲೇ ಇತ್ತು. ಆದ್ರೆ ಹುಲಿಯಾ ಸಿದ್ದರಾಮಯ್ಯ ಅವರ ಘರ್ಜನೆ ಸದ್ಯಕ್ಕೆ ಕಾಂಗ್ರೆಸ್ ನಲ್ಲಿ ನಿಲ್ಲವಂತೆ ಕಾಣುತ್ತಿಲ್ಲ. ಅವರನ್ನು ಕಡೆಗಣಿಸಿ ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ ಎಂಬಂತಾಗಿದೆ. ಅದರಲ್ಲೂ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವುದು ತುಂಬಾ ಕಷ್ಟ ಎಂದು ಕಾಂಗ್ರೆಸ್ ಹೈಕಮಾಂಡ್ ಸಂದೇಶ ರವಾನಿಸಿದೆ.
ಇತ್ತೀಚೆಗೆ ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿದ್ದ ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಪಕ್ಷದ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರ ವಿರೋಧ ಕಡೆಗಣಿಸಿ ಅಧ್ಯಕ್ಷರ ನೇಮಕ ಮಾಡುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರ ವಿರೋಧ ಕಟ್ಟಿಕೊಂಡು ಪಕ್ಷ ಯಾವುದೇ ನಿರ್ಧಾರ ಕೈಗೊಳ್ಳುವುದು ಕಷ್ಟ ಎಂಬ ಮಾಹಿತಿ ನೀಡಿದ್ದಾರೆಂದು ತಿಳಿದು ಬಂದಿದೆ. ಒಂದು ವೇಳೆ ಸಿದ್ದರಾಮಯ್ಯ ಅವರನ್ನು ನಿರ್ಲಕ್ಷ್ಯ ಮಾಡಿ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡಿದರೆ, ಪಕ್ಷ ಇಬ್ಭಾಗವಾಗುವ ಸಾಧ್ಯತೆ ಇದೆ. ಈ ವೇಳೆ ಪಕ್ಷ ಅವರನ್ನು ಕಡೆಗಣಿಸಿ ಯಾವುದೇ ನಿರ್ಧಾರ ಮಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಪಕ್ಷದ ಹಿರಿಯ ನಾಯಕರಾದ ಎಂ.ವೀರಪ್ಪ ಮೊಯ್ಲಿ, ಡಾ.ಜಿ.ಪರಮೇಶ್ವರ್, ಎಚ್.ಕೆ. ಪಾಟೀಲ್ ಅವರನ್ನು ಗುಲಾಂ ನವಿ ಆಜಾದ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರಂತೆ.
ಇದೇ ವಿಚಾರವನ್ನು ಗುಲಾಂ ನಬಿ ಅವರು ಸೋನಿಯಾ ಗಾಂಧಿ ಅವರಿಗೆ ತಿಳಿಸಿದ್ದು, ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಅಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ರಾಜ್ಯದ ಹಿರಿಯ ನಾಯಕರಿಗೆ ರವಾನಿಸಿದ್ದಾರಂತೆ. ಹೈಕಮಾಂಡ್ನ ಈ ನಿರ್ಧಾರದಿಂದ ಪಕ್ಷದ ಹಿರಿಯ ನಾಯಕರು ಬೇಸರಗೊಂಡಿದ್ದಾರೆ ಎನ್ನಲಾಗಿದ್ದು, ಈ ಕುರಿತು ಚರ್ಚಿಸಲು ಸಮಯ ನೀಡುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಡಾ.ಜಿ.ಪರಮೇಶ್ವರ್ ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ