ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು, ಪ್ರೌಢ ಶಾಲಾ ಹಿಂದಿ ಸಹ ಶಿಕ್ಷಕರಾಗಿ ಬಡ್ತಿ ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಎಂ. ಧನಂಜಯ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ 03-02-2020ರಂದು ನಡೆದ ಸಭಾ ನಡವಳಿಯಲ್ಲಿ, ಚಾಯ್ತಿಯಲ್ಲಿದ್ದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಪ್ರಸ್ತಾಪಿಸಿದಂತೆ ಈಗಾಗಲೇ ನೇಮಕಾತಿ ಹೊಂದಿ ಕರ್ತವ್ಯದಲ್ಲಿರುವ ಹಿಂದಿ ಭಾಷಾ ಶಿಕ್ಷಕರನ್ನು ಮುಂಬಡ್ತಿಗೆ ಪರಿಷ್ಕೃತ ಸರ್ಕಾರದ ಆದೇಶಗಳು ಜಾರಿಯಾಗುವ ಪೂರ್ವದಲ್ಲಿಯೇ ಜಾಲ್ತಿಯಲ್ಲಿದ್ದ 24-06-2003 ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇಮಕಾತಿ ಪಡೆದು, ಕರ್ತವ್ಯ ನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ, ಸೇವಾ ಜೇಷ್ಠತೆ ಆಧಾರದ ಮೇಲೆ ಮುಂಬಡ್ತಿಗೆ ಪರಿಗಣಿಸಲು ತೀರ್ಮಾನಿಸಿರುವ ಹಿನ್ನಲೆಯಲ್ಲಿ, ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಹಿಂದಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಪ್ರೌಢ ಶಾಲೆಯ ಹಿಂದಿ ಸಹ ಶಿಕ್ಷಕರಾಗಿ ಮುಂಬಡ್ತಿ ನೀಡಿದೆ.








