ಬೆಂಗಳೂರು : ವಿಧಾನಸಭೆಯಲ್ಲಿಂದು ಸಂವಿಧಾನದ ಮೇಲಿನ ಚರ್ಚೆ ವೇಳೆ ಸಚಿವ ಡಾ.ಕೆ ಸುಧಾಕರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ನಡುವೆ ವಾಗ್ಯುದ್ಧ ನಡೆಯಿತು. ಸದನದಲ್ಲಿ ಸುಧಾಕರ್ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷ ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಅಲ್ಲದೆ ತುರ್ತು ಪರಿಸ್ಥಿತಿಯನ್ನೂ ಉಲ್ಲೇಖಿಸಿ ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಮೇಶ್ ಕುಮಾರ್ ನೀವು ಪಕ್ಷಾಂತರಿ ನಿಮಗೆ ತುರ್ತುಪರಿಸ್ಥಿತಿಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.
ಮತ್ತೆ ಭಾಷಣ ಮುಂದುವರಿಸಿದ ಸುಧಾಕರ್ ನಮಗೆ ವಿಧಾನಸಭೆಯಲ್ಲಿ ಸ್ಪೀಕರ್ ಪೀಠದಿಂದ ಅನ್ಯಾಯವಾಗಿದೆ ಎಂದು ಪರೋಕ್ಷವಾಗಿ ರಮೇಶ್ ಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸ್ಪೀಕರ್ ಅನರ್ಹಗೊಳಿಸಿದ ನಿರ್ಧಾರದ ಕುರಿತಾಗಿ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ಪ್ರಸ್ತಾಪಿಸಿದ ಸುಧಾಕರ್, 17 ಜನರ ರಾಜಕೀಯ ಭವಿಷ್ಯ ಕೊನೆಗೊಳ್ಳುತ್ತಿತ್ತು, ನಮ್ಮ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಹರಿಹಾಯ್ದರು. ಈ ವೇಳೆ, ವಿರೋಧ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ನೀವು ಅಧಿಕಾರದ ದುರಾಸೆಯಿಂದ ಪಕ್ಷ ಬಿಟ್ಟು ಹೋಗಿದ್ದೀರಿ ಎಂದು ಕಿಡಿಕಾರಿದರು. ಈ ವೇಳೆ ಸುಧಾಕರ್ ಮಾತಿನಿಂದ ಕೆಂಡಾಮಂಡಲರಾದ ರಮೇಶ್ ಕುಮಾರ್, ಅನರ್ಹತೆಯ ಕುರಿತಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಸದನದಲ್ಲಿ ಚರ್ಚೆ ಮಾಡಲು ಕಾನೂನು ಸಚಿವರು ಒಪ್ಪುತ್ತೀರಾ ಎಂದು ಧ್ವನಿ ಏರಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆಯಿತು.








