ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆಯನ್ನು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಸುಹಾಸ್ ಹತ್ಯೆ ಯಾವುದೇ ಜಾತಿ ಅಥವಾ ಧರ್ಮ ಸಂಬಂಧಿತ ಗಲಾಟೆಯಿಂದ ನಡೆದದ್ದು ಅಲ್ಲ. ಇದು ಸಂಪೂರ್ಣ ವೈಯುಕ್ತಿಕ ಗಲಾಟೆಯಿಂದ ಸಂಭವಿಸಿದ ದುಃಖದ ಘಟನೆ ಎಂದು ತಿಳಿಸಿದ್ದಾರೆ.
ಸ್ಪೀಕರ್ ಖಾದರ್, ಈ ರೀತಿಯ ಕ್ರೂರ ಕೃತ್ಯಗಳನ್ನು ನಾವೆಲ್ಲರೂ ಖಂಡಿಸಬೇಕು. ಸಮಾಜದಲ್ಲಿ ಶಾಂತಿ, ಸಾಮರಸ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ಸುಹಾಸ್ ಶೆಟ್ಟಿ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಪ್ರಕರಣದಲ್ಲಿ ನಿರ್ದೋಷಿಗಳಿಗೆ ಶಿಕ್ಷೆ ಆಗಬಾರದು, ಮತ್ತು ನಿಜವಾದ ಅಪರಾಧಿಗಳನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ, ಸತ್ಯವನ್ನು ತಿಳಿಯುವ ಮೊದಲು ಯಾವುದೇ ಘೋಷಣೆಗಳು, ಆರೋಪಗಳು ಅಥವಾ ರಾಜಕೀಯ ಹೇಳಿಕೆಗಳನ್ನು ನೀಡುವುದು ತಪ್ಪು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಅವರು ಸರಿಯಾದ ತೀರ್ಮಾನಕ್ಕೆ ಬರಲಿ ಎಂದು ಹೇಳಿದ್ದಾರೆ.