ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಸಿಬಿಐಗೆ
ಮುಂಬೈ, ಅಗಸ್ಟ್ 5: ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗುವುದು ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.
ಬಿಹಾರ ಅಧಿಕಾರಿಗಳ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರವು ಈ ಕ್ರಮ ಕೈಗೊಂಡಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮಂಗಳವಾರ ಸಂಜೆ ಸುಶಾಂತ್ ಕೇಸ್ ಅನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿದ್ದರು.
ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗುತ್ತಿದೆ ಎಂದು ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ಗೆ ತಿಳಿಸಿದರು.
ಮಾಜಿ ಅಟಾರ್ನಿ ಜನರಲ್ ಮುಕುಲ್ ರೊಹಟಗಿ ಅವರು ತನಿಖೆಯಲ್ಲಿ ಬಿಹಾರ ಸರ್ಕಾರವನ್ನು ಪ್ರತಿನಿಧಿಸಿದರೆ, ಹಿರಿಯ ವಕೀಲ ಶ್ಯಾಮ್ ದಿವಾನ್ ಸುಶಾಂತ್ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಪರ ವಾದಿಸಿದರು.
ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಕೆ.ಕೆ.ಸಿಂಗ್ ಅವರು ಪಾಟ್ನಾದಲ್ಲಿ ದಾಖಲಾಗಿರುವ ಪ್ರಕರಣದ ಬಗ್ಗೆ ಸಿಬಿಐ ಹೆಚ್ಚಿನ ತನಿಖೆ ನಡೆಸುವಂತೆ ಕೋರಿ, ಬಿಹಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ರಿಯಾ ಚಕ್ರವರ್ತಿ ಅವರು ಸುಶಾಂತ್ ಸಾವಿಗೆ ಕಾರಣವೆಂದು ಆರೋಪಿಸಿ ಈ ತಿಂಗಳ ಆರಂಭದಲ್ಲಿ ಪಾಟ್ನಾದ ರಾಜೀವ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.