ಚುನಾವಣಾ ಫಲಿತಾಂಶ ಪ್ರಶ್ನಿಸಿ ‘ದೀದಿ’ ಸಲ್ಲಿಸಿರುವ ಅರ್ಜಿ ವರ್ಗಾವಣೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಸುವೇಂದು ಅಧಿಕಾರಿ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ತಮ್ಮ ಮಾಜಿ ಆಪ್ತ ಸುವೇಂದು ಅಧಿಕಾರಿಯ ವಿರುದ್ಧ ನಂದಿಗ್ರಾಮದಿಂದ ಸೋತ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಫಲಿತಾಂಶ ಪ್ರಶ್ನಿಸಿ ಕಲ್ಕತ್ತಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಂದಿಗ್ರಾಮದಲ್ಲಿ ಅಧಿಕಾರಿ 1,956 ಮತಗಳಿಂದ ಮಮತಾ ಬ್ಯಾನರ್ಜಿಯವರನ್ನು ಸೋಲಿಸಿದ್ದರು. ಫಲಿತಾಂಶವನ್ನು ಮರು ಮೌಲ್ಯಮಾಪನ ಮಾಡುವಂತೆ ಕೋರಿ ಮೇ 21 ರಂದು ಮಮತಾ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಈ ಅರ್ಜಿಯನ್ನ ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಬಿಜೆಪಿ ಶಾಸಕ ಹಾಗೂ ಪಶ್ಚಿಮ ಬಂಗಾಳದ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಬುಧವಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದಾರೆ.
ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು : ಹಲವು ವಸ್ತುಗಳ ಆಮದಿಗೆ ಬ್ರೇಕ್
ಕಲ್ಕತ್ತಾ ಹೈಕೋರ್ಟ್ ಮಮತಾ ಬ್ಯಾನರ್ಜಿಯವರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡು ನಂದಿಗ್ರಾಮ ಶಾಸಕ ಸುವೇಂದುಗೆ ಸಂಬಂಧಪಟ್ಟ ಇತರರಿಗೆ ನೋಟಿಸ್ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ. ನಂದಿಗ್ರಾಮದಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಹಾಗೂ ಸಾಧನಗಳನ್ನು ಸಂರಕ್ಷಿಸುವಂತೆ ನ್ಯಾಯಮೂರ್ತಿ ಶಂಪಾ ಸರ್ಕಾರ್ ಅವರು ಚುನಾವಣಾ ಆಯೋಗಕ್ಕೆ ಇಂದು ನಿರ್ದೇಶನ ನೀಡಿದರು. ಜುಲೈ 7 ರಂದು ರಾಜ್ಯದಲ್ಲಿ ನ್ಯಾಯಾಂಗದ ಮೇಲಿನ ದಾಳಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಚಂದಾ ನೀಡಿದ ಆದೇಶವನ್ನು ಅಧಿಕಾರಿ ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ. ಅರ್ಜಿಯನ್ನು ಆಲಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ.








