ರಾಮನಗರ: ಸರ್ಕಾರದ 6ನೇ ಗ್ಯಾರಂಟಿ ಸದ್ಯದಲ್ಲಿಯೇ ಘೋಷಣೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ.
ಮಾಗಡಿ ಕೋಟೆ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿರುವ ಅವರು, ಈ 6ನೇ ಗ್ಯಾರಂಟಿಯ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಿದ್ದಾರೆ. ಈ ಕುರಿತು ಸಿಎಂ ಹಾಗೂ ಡಿಸಿಎಂ ಜೊತೆ ಚರ್ಚಿಸಿ ಘೋಷಿಸಲಾಗುವುದು ಎಂದು ಹೇಳಿದ್ದಾರೆ.
ಸಂಸದ ಡಿ.ಕೆ. ಸುರೇಶ್ ನಿಮ್ಮ ಸೇವೆ ಮಾಡಿದ್ದಾರೆ. ಕಾಂಗ್ರೆಸ್ ಅಂದ್ರೆ ಬದ್ಧತೆ. ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿ ಮಾಡಿ ನುಡಿದಂತೆ ನಡೆದಿದೆ. ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಗೃಹಲಕ್ಷ್ಮಿ ಅನುಕೂಲ ಆಗಿದೆ. ಮಾಗಡಿಯಲ್ಲಿಯೇ 51 ಸಾವಿರ ಕುಟುಂಬಗಳು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿವೆ. ಡಿ.ಕೆ. ಸುರೇಶ್ ಯಾವಾಗಲೂ ಕೆಲಸ ಮಾಡುವ ರಾಜಕಾರಣಿ. ಅವರಿಗೆ ಮತ್ತೊಂದು ಅವಕಾಶ ಸಿಗಬೇಕಿದೆ. ಹೀಗಾಗಿ ನೀವೆಲ್ಲರೂ ಅವರ ಬೆನ್ನಿಗೆ ನಿಲ್ಲಿ ಎಂದು ಹೇಳಿದ್ದಾರೆ.