ವಿಧಾನಸಭಾ ಕಲಾಪದ ನೇರ ಪ್ರಸಾರ ಮಾಡುವುದಕ್ಕೆ ಮಾಧ್ಯಮಗಳಿಗೆ ನಿರ್ಬಂಧಿಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿ, ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ. ರಾಜ್ಯ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರೋಧಿ ಎನ್ನುವುದಕ್ಕೆ ವಿಧಾನಮಂಡಲದ ಕಲಾಪದ ಪ್ರತ್ಯಕ್ಷ ವರದಿ ಮಾಡದಂತೆ ಟಿವಿ ಚಾನೆಲ್ಗಳ ಮೇಲೆ ಹೇರಿರುವ ನಿರ್ಬಂಧವೇ ಸಾಕ್ಷಿ. ಟಿವಿ ಚಾನೆಲ್ಗಳ ಕ್ಯಾಮೆರಾಗಳಿಗೆ ಏಕಪಕ್ಷೀಯವಾಗಿ ನಿರ್ಬಂಧ ಹೇರಿರುವ ಸಭಾಧ್ಯಕ್ಷರ ಮಾಧ್ಯಮ ವಿರೋಧಿ ನಡವಳಿಕೆಯ ವಿರುದ್ಧ ಮಾಧ್ಯಮ ಮಿತ್ರರು ನಡೆಸುವ ಹೋರಾಟಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಮಂಡಲದ ಕಲಾಪದ ವರದಿಗೆ ಸರ್ಕಾರಿ ಚಾನೆಲ್ ಚಂದನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರದ ಋಣದಲ್ಲಿರುವ ಆ ಚಾನೆಲ್ ವಿರೋಧ ಪಕ್ಷಗಳ ಸದಸ್ಯರ ಮುಖಗಳನ್ನು ಮರೆಮಾಚಿ ಕೇವಲ ಸಭಾಧ್ಯಕ್ಷರ ಮುಖ ಮಾತ್ರ ತೋರಿಸುತ್ತಿದ್ದಾರೆ. ಇನ್ನು ಸದನದೊಳಗೆ ತಮ್ಮ ಬಿಜೆಪಿ ಸದಸ್ಯರು ನೀಲಿಚಿತ್ರ ನೋಡುತ್ತಾರೆಂಬ ಭಯ ಬಿಜೆಪಿಗೆ ಇದೆ. ಅವರಿಗೆ ಬುದ್ದಿ ಹೇಳಬೇಕೇ ಹೊರತು, ಅದಕ್ಕಾಗಿ ಟಿವಿ ಚಾನೆಲ್ ಕ್ಯಾಮೆರಾ ನಿರ್ಬಂಧಿಸುವುದಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ನಾನು ಮುಖ್ಯಮಂತ್ರಿಯಾಗಿದ್ದಾಗಲೂ ಟಿವಿ ಚಾನೆಲ್ಗಳ ಕ್ಯಾಮೆರಾಗಳನ್ನು ನಿರ್ಬಂಧಿಸುವ0ತೆ ಕೆಲವರು ಒತ್ತಾಯಿಸಿದ್ದರು. ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹತ್ತಿಕ್ಕಲು ನಾನು ಒಪ್ಪಲಿಲ್ಲ ಎಂದು ಸಿದ್ದರಾಮಯ್ಯ ಬಿಜೆಪಿ ನಡೆಯನ್ನು ಖಂಡಿಸಿದ್ದಾರೆ.








