ಡೆಹ್ರಾಡೂನ್: ಆಳವಾದ ಪ್ರಪಾತಕ್ಕೆ ಬಸ್ ಬಿದ್ದ ಪರಿಣಾಮ 8 ಜನ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ (Uttarakhand) ರುದ್ರಪ್ರಯಾಗದ ಋಷಿಕೇಶ-ಬದರಿನಾಥ್ ಹೆದ್ದಾರಿಯಲ್ಲಿ (Rishikesh-Badrinath highway) ನಡೆದಿದೆ.
ಟೆಂಪೋ ಟ್ರಾವೆಲರ್ 200 ಮೀಟರ್ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಈ ಟೆಂಪೋನಲ್ಲಿ 23ಕ್ಕೂ ಅಧಿಕ ಜನ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್ಡಿಆರ್ಎಫ್) ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಹೇಳಿದ್ದಾರೆ.
ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಇದೊಂದು ತೀವ್ರ ದುಃಖಕರ ಸಂಗತಿ. ಸ್ಥಳೀಯ ಆಡಳಿತ ಮತ್ತು ಎಸ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಪಘಾತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ದುಃಖಿತ ಕುಟುಂಬಕ್ಕೆ ಈ ಅಪಾರ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.