ಕೊಪ್ಪಳ: ಕಿರುಕುಳಕ್ಕೆ (Harassment) ಬೇಸತ್ತ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಗರದ ಬಿ.ಟಿ. ಪಾಟೀಲ್ ನಗರದ ರಾಜೀವ ಬಗಾಡೆ (50) ಸಾವನ್ನಪ್ಪಿದ ವ್ಯಕ್ತಿ. ಇವರು ಕಳೆದ ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಇವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಪಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಗುತ್ತಿಗೆದಾರ ತಮ್ಮ ಸಾವಿಗೆ ಯಾರೆಲ್ಲ ಕಾರಣ ಎಂಬುದನ್ನು ಡೆತ್ ನೋಟ್ನಲ್ಲಿ (Death Note) ಉಲ್ಲೇಖಿಸಿದ್ದಲ್ಲದೇ, ವಿಡಿಯೋ ದಾಖಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಕಾಮಗಾರಿಗಳನ್ನು ಉಪ ಗುತ್ತಿಗೆ ಪಡೆದು ಕೆಲಸ ನಿರ್ವಹಿಸಿದ್ದು, ಕಾಮಗಾರಿ ಪೂರ್ಣಗೊಂಡರೂ ಹಣ ಪಾವತಿ ಮಾಡಿಲ್ಲ. ಕೆಲವರು ಹಣ ಪಡೆದು ವಾಪಸ್ ನೀಡಿಲ್ಲ. ಈ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ಇವರು, ಕಾಂಗ್ರೆಸ್ ಮುಖಂಡ ಪ್ರಸನ್ನ ಗಡಾದ, ನಗರಸಭೆ ಸದಸ್ಯ ಚೆನ್ನಪ್ಪ ಕೋಟ್ಯಾಳ್ ಸೇರಿದಂತೆ 7 ಜನರ ಹೆಸರನ್ನು ಉಲ್ಲೇಖಿಸಲಾಗಿದೆ. ಹೀಗಾಗಿ ಇವರ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಗಾಡೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.