ಬಿಡದಿ ಟೌನ್ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಭೈರಮಂಗಲದಲ್ಲಿ ನಡೆದ ರೈತರ ಅಹವಾಲು ಸ್ವೀಕಾರ ಸಭೆಯಲ್ಲಿ ಕುಮಾರಸ್ವಾಮಿಯವರು ಒಂದು ಹೆಜ್ಜೆ ಮುಂದೆ ಹೋಗಿ, ಈ ಯೋಜನೆಯ ರೂವಾರಿ ಎನ್ನಲಾದ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದರು. ಇದಕ್ಕಾಗಿ ವೇದಿಕೆಯ ಮೇಲೆ ಡಿ.ಕೆ. ಶಿವಕುಮಾರ್ ಅವರಿಗಾಗಿ ಒಂದು ಖಾಲಿ ಕುರ್ಚಿಯನ್ನು ಮೀಸಲಿಟ್ಟು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾಯುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿದರು.
ನನಗೆ ರಾಜಕೀಯವಾಗಿ ಜನ್ಮ ನೀಡಿದ ಈ ನೆಲದ ರೈತರ ಬದುಕಿನೊಂದಿಗೆ ಚೆಲ್ಲಾಟವಾಡಲು ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಗುಡುಗಿದರು. ಈ ಭಾಗದ ತಾಯಂದಿರು ಮತ್ತು ಸಹೋದರಿಯರ ಆಶೀರ್ವಾದದಿಂದಲೇ ನಾನು ಈ ಹಂತಕ್ಕೆ ಬೆಳೆದಿದ್ದೇನೆ. ಅಧಿಕಾರಕ್ಕಾಗಿ ನಾನು ಎಂದೂ ಹಪಹಪಿಸಿಲ್ಲ, ರೈತರ ಕಣ್ಣೀರು ಒರೆಸುವುದೇ ನನ್ನ ಮೊದಲ ಗುರಿಯಾಗಿತ್ತು. ಕೇವಲ ಎರಡು ವರ್ಷದ ಔಟ್ ಸೋರ್ಸಿಂಗ್ ಕೆಲಸ ಕೊಡುವ ಕಾರ್ಖಾನೆಗಳಿಗಾಗಿ ರೈತರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳುವುದು ಎಷ್ಟು ನ್ಯಾಯ ಎಂದು ಅವರು ಪ್ರಶ್ನಿಸಿದರು.
ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದರು. ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗದ ಸರ್ಕಾರ, ಗುಂಡಿ ಮುಚ್ಚುವ ಹೆಸರಿನಲ್ಲಿ 1200 ಕೋಟಿ ರೂಪಾಯಿ ಲೂಟಿ ಮಾಡಿದೆ ಎಂದು ಗಂಭೀರ ಆರೋಪ ಮಾಡಿದರು. ರಾಮನಗರ ಜಿಲ್ಲೆಯ ಹೆಸರನ್ನು ಬದಲಿಸಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ನಿರ್ಧಾರದ ಹಿಂದೆ ರಿಯಲ್ ಎಸ್ಟೇಟ್ ಹಿತಾಸಕ್ತಿ ಅಡಗಿದೆ ಎಂದು ಕಿಡಿಕಾರಿದರು.
ವಿಶೇಷವೆಂದರೆ, ಕುಮಾರಸ್ವಾಮಿ ಭಾಷಣ ಮಾಡುವಾಗ ಮಳೆ ಸುರಿಯಲಾರಂಭಿಸಿದರೂ ರೈತರು ಮತ್ತು ಸಾರ್ವಜನಿಕರು ಸ್ಥಳದಿಂದ ಕದಲದೆ ಅವರ ಮಾತುಗಳನ್ನು ಆಲಿಸಿದರು. ಇದನ್ನು ಕಂಡು ಭಾವುಕರಾದ ಕುಮಾರಸ್ವಾಮಿ, ಮಳೆ ಬಂದರೂ ಪರವಾಗಿಲ್ಲ ನಾನು ನಿಮ್ಮೊಂದಿಗೆ ಮಳೆಯಲ್ಲೇ ನಿಂತು ಮಾತನಾಡುತ್ತೇನೆ. ವರುಣದೇವನೇ ಈ ಹೋರಾಟಕ್ಕೆ ಸಾಕ್ಷಿಯಾಗಿದ್ದಾನೆ, ಇದು ನಿಮ್ಮ ಗೆಲುವಿನ ಶುಭ ಸೂಚನೆ ಎಂದು ರೈತರನ್ನು ಹುರಿದುಂಬಿಸಿದರು. ರೈತರ ಭೂಮಿ ಉಳಿಸುವ ಈ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೆ ವಿಶ್ರಮಿಸುವುದಿಲ್ಲ ಎಂದು ಅವರು ಭರವಸೆ ನೀಡಿದರು.







