ಬೆಂಗಳೂರು: ರಾಜ್ಯ ಸರಕಾರಗಳ ವ್ಯಾಪ್ತಿಯಲ್ಲಿರುವ ಕಾಯ್ದೆಗಳ ಬದಲಾವಣೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ರವಾನಿಸಿದ್ದು, ಇದು ಒಕ್ಕೂಟ ವ್ಯವಸ್ಥೆ ನಾಶ ಮಾಡುವ ಹುನ್ನಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಜುಲೈ 2 ರಂದು ರಾಜ್ಯಾದ್ಯಂತ ನಡೆಯಲಿರುವ ಪ್ರತಿಜ್ಞಾ ದಿನ ಕಾರ್ಯಕ್ರಮ ಪೂರ್ವ ತಯಾರಿ ಕುರಿತ ಸಮಾಲೋಚನಾ ಸಭೆಯಲ್ಲಿ ಮಂಗಳವಾರ ಮಾತನಾಡಿದ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷವು ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ತಂದು ಜನರಿಗೆ ಕೃಷಿ ಮಾಡಲು ಭೂಮಿ ನೀಡಿದೆ. ಅದರೆ ಈಗಿನ ಸರಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಸಣ್ಣ ರೈತರಿಗೆ ಮರಣ ಶಾಸನ ಬರೆಯುತ್ತಿದೆ. ಅದೇ ರೀತಿ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾಗಿದೆ. ಇನ್ನು ಅಂತಾರಾಷ್ಟ್ರೀಯ ಕಾರ್ಮಿಕ ಒಕ್ಕೂಟ ಹಾಗೂ ಅಧಿವೇಶನದಲ್ಲಿ ಚರ್ಚಿಸಿ ತಂದ ಕಾರ್ಮಿಕ ಕಾಯ್ದೆಯನ್ನು ಮೂರು ವರ್ಷ ರದ್ದು ಮಾಡಲು ಹೊರಟಿದ್ದಾರೆ.
ಇನ್ನು ಅವೈಜ್ಞಾನಿಕವಾಗಿ ಇಂಧನ ಬೆಲೆ ಏರಿಕೆಯಾಗುತ್ತಿದ್ದು, ಈ ಬಗ್ಗೆ ಯಾರೂ ಮಾತನಾಡುತ್ತಲೇ ಇಲ್ಲ. ಬೆಲೆ ಕಡಿಮೆ ಮಾಡಬೇಕಾದ ಸಮಯದಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಬೆಲೆ ಏರಿಸಿ ಕೇಂದ್ರ ಸರ್ಕಾರ ಜನ ವಿರೋಧಿ ತೀರ್ಮಾನ ಕೈಗೊಂಡಿದೆ.
ಈ ಎಲ್ಲ ವಿಚಾರವಾಗಿ ನಮ್ಮ ಶಾಸಕಾಂಗ ಪಕ್ಷದ ನಾಯಕರ ಜತೆ ಚರ್ಚಿಸಿ, ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ನಿಮಗೆ ಸಂದೇಶ ರವಾನಿಸುತ್ತೇವೆ.
ನಾವು ಸಂಪೂರ್ಣ ಸಹಕಾರ ನೀಡಿದರೂ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹೃದಯ ಗೆಲ್ಲಲು ಸಾಧ್ಯವಾಗಿಲ್ಲ. ಇದೊಂದು ಯೂಟರ್ನ್ ಸರ್ಕಾರ. ಬೆಳಗ್ಗೆ ಕೊಟ್ಟ ಹೇಳಿಕೆಯನ್ನು ಸಂಜೆ ಬದಲಾಯಿಸುತ್ತದೆ. ಅಧಿವೇಶನ ಕರೆಯಲಿ ಎಲ್ಲವನ್ನು ಬಿಚ್ಚಿಡುತ್ತೇವೆ. ನಾನಾಗಲಿ ನಮ್ಮ ನಾಯಕರಾದ ಸಿದ್ದರಾಮಯ್ಯನವರಾಗಲಿ ಏನನ್ನೂ ಹೇಳುವುದೇ ಬೇಡ, ಮಾಧ್ಯಮಗಳೇ ಎಲ್ಲವನ್ನು ನಿಮ್ಮ ಮುಂದೆ ವಿವರಿಸುತ್ತಿವೆ.
ನಾವು ಸಲಹೆ ಕೊಡುತ್ತೇವೆ ಕೇಳಿ ಎಂದರೆ ನಮ್ಮ ಸಲಹೆ ಬೇಡ ಎಂದರು. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಜಕಾರಣ ಮಾಡುವುದು ಬೇಡ ಎಂದು ಸಹಕಾರ ನೀಡಿದೆವು. ನಾವು ಈ ವಿಚಾರದಲ್ಲಿ ತೋರಿದ ಹೃದಯ ಶ್ರೀಮಂತಿಕೆಯನ್ನು ಅವರು ಉಳಿಸಿಕೊಳ್ಳಲಿಲ್ಲ. ಕಡೆಗೆ ಯಾವ ಮಟ್ಟಕ್ಕೆ ಇಳಿದರು ಎಂದರೆ, ಕಾರ್ಮಿಕರಿಗೆ ನೀಡುವ ಕಿಟ್ ಅನ್ನು ತಮ್ಮ ಫೋಟೋ ಹಾಕಿಕೊಂಡು ತಮ್ಮ ಬೆಂಬಲಿಗ ಮತದಾರರಿಗೆ ಕೊಟ್ಟರು.
ಅಧಿಕಾರ ಇಲ್ಲದಿದ್ದರೂ, ಚುನಾವಣೆಯಲ್ಲಿ ಸೋತಿದ್ದರೂ ಕಾಂಗ್ರೆಸ್ ನಾಯಕರು ರಾಜ್ಯದ ಉದ್ದಗಲಕ್ಕೂ ಸಹಾಯ ಮಾಡಿದರು. ಆಮೂಲಕ ಸಂಕಷ್ಟದಲ್ಲಿರುವ ಜನರ ಕಣ್ಣೀರು ಒರೆಸಿದರು. ರೈತರಿಗೆ ಸಹಾಯ ಮಾಡಿ ಅಂತಾ ಕೇಳಿಕೊಂಡರೂ ಅವರ ನೆರವಿಗೆ ಬರಲಿಲ್ಲ. ಬೆಂಬಲ ಬೆಲೆ ನಿಗದಿ ಮಾಡಲಿಲ್ಲ. ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಿಲ್ಲ. ರೈತರ ಸಂಕಷ್ಟ ನೋಡಲಾಗದೆ ಕಾಂಗ್ರೆಸ್ ನಾಯಕರು 100 ಕೋಟಿ ರೂಪಾಯಿಗೂ ಹೆಚ್ಚಿನ ತರಕಾರಿ ಖರೀದಿಸಿದರು. ಆ ಮೂಲಕ ಬೆಲೆ ಕುಸಿತ ತಪ್ಪಿಸಿದರು. ಇದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ಆದರೆ ನಮಗೆ ಜನರ ಬಗ್ಗೆ ಇರುವ ಕಾಳಜಿ, ಬದ್ಧತೆ ಮುಖ್ಯ.
ಹೊರಗಡೆಯಿಂದ ಬರುವ ಜನರಿಗೆ ವಿಮಾನ ಸೌಲಭ್ಯ ಕೊಡುತ್ತೀರಿ. ಆದರೆ ದೇಶ ಕಟ್ಟುವ ಕಾರ್ಮಿಕರಿಗೆ ಬಸ್, ರೈಲು ವ್ಯವಸ್ಥೆ ಕಲ್ಪಿಸಲಿಲ್ಲ. ಇವರ ಬಳಿ ಮೂರು ಪಟ್ಟು ಹಣ ವಸೂಲಿ ಮಾಡಲು ಹೊರಟರು. ಇವರ ಪ್ರಯಾಣಕ್ಕೆ ಸಹಕರಿಸುವ ಬಗ್ಗೆ ನಮ್ಮ ಸಿದ್ದರಾಮಯ್ಯನವರು ಹಾಗೂ ರಾಹುಲ್ ಗಾಂಧಿ ಅವರಿಗೆ ಹೇಳಿದಾಗ ಮೊದಲು ಆ ಕೆಲಸ ಮೊದಲು ಮಾಡಿ ಎಂದು ಪ್ರೋತ್ಸಾಹ ನೀಡಿದರು.
ಮಕ್ಕಳು ಮತ್ತು ಗರ್ಭಿಣಿಯರಿಗೆ ನೀಡುವ ಆಹಾರ ಪದಾರ್ಥಗಳನ್ನೂ ದುರುಪಯೋಗ ಮಾಡಿಕೊಂಡರು. ಈ ಬಗ್ಗೆ ದೂರು ಕೊಟ್ಟರೂ ಈವರೆಗೂ ಕ್ರಮ ಕೈಗೊಂಡಿಲ್ಲ. ಇಂತಾ ಭಂಡತನ ಯಾಕೆ ಮುಖ್ಯಮಂತ್ರಿಗಳೇ?
70 ವರ್ಷ ದೇಶಕ್ಕೆ ಕಾಂಗ್ರೆಸ್ ಏನು ಮಾಡಿದೆ ಅಂತಾ ಕೇಳುತ್ತಾರಲ್ಲಾ, ಈ ಬಡವರು, ಕಾರ್ಮಿಕರಿಗೆ ಧ್ವನಿಯಾಗಿ, ಆರ್ಥಿಕ ಬಲ ತುಂಬಿ ದೇಶವನ್ನು ಕಟ್ಟಿದ್ದೇವೆ. ಇದು ದೇಶಕ್ಕೆ ಕಾಂಗ್ರೆಸ್ ಕೊಡುಗೆ.
ಕೋವಿಡ್ ವಿಚಾರದಲ್ಲಿ ಸರ್ಕಾರ ವಿಫಲ:
ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅವರ ವೈಫಲ್ಯಗಳನ್ನು ಬಿಂಬಿಸುತ್ತಿರುವ ಮಾಧ್ಯಮಗಳೇ ಅದಕ್ಕೆ ಸಾಕ್ಷಿ. ನಿಮಗೆ ಧನ್ಯವಾದಗಳು. ರಾಜ್ಯದಲ್ಲಿ ಸಾವು-ನೋವು ಹೆಚ್ಚುತ್ತಿರುವ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಅವರು ನಮ್ಮ ಸಲಹೆ ಕೇಳಿದರಷ್ಟೇ ಕೊಡುತ್ತೇವೆ ಎಂದರು .