Siddaramayya: ಜೀವ ಬೆದರಿಕೆ ಹಿನ್ನಲೆ – ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಳ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣದ ನಂತರ ಭದ್ರತೆಯನ್ನು ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಜಿಲ್ಲೆಗಳಿಗೆ ಪ್ರವಾಸ ಮಾಡುವ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆಯನ್ನು ನೀಡಲು ನಿರ್ಧಾರ ಮಾಡಲಾಗಿದೆ.
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರ ಭದ್ರತೆ ಕುರಿತು ಸಿ ಎಂ ಬಸವರಾಜ್ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ‘ಸಿದ್ದರಾಮಯ್ಯರಿಗೆ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಮಹಾನಿರ್ದೇಶಕರನ್ನು ಕರೆಸಿ ಈ ಬಗ್ಗೆ ಚರ್ಚಿಸಲಾಗಿದೆ. ಕೂಡಲೇ ವಿರೋಧ ಪಕ್ಷದ ನಾಯಕರ ಭದ್ರತೆ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದೇನೆ’ ಅಂತಾ ಹೇಳಿದ್ದಾರೆ.
ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಪೊಟೋ ಕುರಿತು ನೀಡಿದ್ದ ಹೇಳಿಕೆಗೆ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಗುರುವಾರ ಕೊಡಗು ಜಿಲ್ಲೆಗೆ ಪ್ರವಾಸ ತೆರಳಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅವರ ಕಾರಿಗೆ ಮೊಟ್ಟೆ ಎಸೆಯಲಾಗಿತ್ತು. ಅಷ್ಟೇ ಅಲ್ಲ, ಭಿತ್ತಿಪತ್ರವನ್ನು ಅವರ ಕಾರಿನೊಳಗೆ ಎಸೆಯಲಾಗಿತ್ತು.