ಬೆಂಗಳೂರು:ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಗೆ ಸಂಬಂಧಿಸಿ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, “ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ರಾಜ್ಯ ಸರಕಾರ ಈ ಕೂಡಲೇ ಬಂಧಿಸಬೇಕು. ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರಲಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿ.ವೈ.ವಿಜಯೇಂದ್ರ ಆಕ್ರೋಶ: “ಚಾಮರಾಜಪೇಟೆಯಲ್ಲಿ ರಾಕ್ಷಸಿ ಮನಸ್ಥಿತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ, ಅಮಾನುಷ ಹಾಗೂ ಕ್ರೂರ ಕೃತ್ಯವಾಗಿದ್ದು, ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ಹೇಳಿದರು. “ಗೋವು’ ಎಂದರೆ ಸಕಲ ಜೀವರಾಶಿಗಳಿಗೂ ಮಾತೆ. ಹೀಗಾಗಿ ಹಿಂದೂಗಳು ಗೋವನ್ನು ಮಾತೃದೇವತೆಯ ಸ್ಥಾನ ನೀಡಿ ಕಾಮಧೇನು ಎಂದು ಪೂಜಿಸುತ್ತಾರೆ. ಕರ್ನಾಟಕದ ಸಂಸ್ಕೃತಿಯಲ್ಲಿ ಪುಣ್ಯಕೋಟಿಯ ಕಥೆಯ ಹಾಡು ಜಗತ್ತಿನ ಮೂಲೆ ಮೂಲೆಗೂ ಪಸರಿಸಿದೆ. ನಾಡಿದ್ದು ಮಕರ ಸಂಕ್ರಾಂತಿಯಂದು ಗೋ ಮಾತೆಗೆ ಪೂಜೆ ಸಲ್ಲಿಸುವ ಪಾವಿತ್ರ್ಯತೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ ಅನುಸರಿಸುತ್ತಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಮಾತೃ ಕೊರತೆ ನೀಗಿಸಲು ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯಕ್ಕೆ ಇಳಿದಿರುವ ಘಟನೆ ಕರ್ನಾಟಕದ ರಾಜಧಾನಿಯಲ್ಲೇ ನಡೆಯುತ್ತಿದೆ ಎಂದರೆ ಇದರ ಹಿಂದಿರುವ ಕುಮ್ಮಕ್ಕಿನ ಶಕ್ತಿ ಯಾವುದು ಎನ್ನುವುದು ಊಹಿಸಿಕೊಳ್ಳದಷ್ಟು ಕರುನಾಡಿನ ಜನತೆ ಮುಗ್ಧರಲ್ಲ,” ಎಂದು ವಿಜಯೇಂದ್ರ ಹೇಳಿದರು. “ಕೃತ್ಯ ನಡೆದಿರುವ ಕ್ಷೇತ್ರ ಯಾರ ಮುಷ್ಠಿಯಲ್ಲಿದೆ, ಈ ರಾಜ್ಯ ಆಳುತ್ತಿರುವವರ ಮನಸ್ಥಿತಿ ಯಾರ ಪರವಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ. ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಇದಕ್ಕೆ ಕುಮ್ಮಕ್ಕು ನೀಡುತ್ತಿರುವವರು ಸರ್ಕಾರದೊಳಗಿನ ಶಕ್ತಿಗಳು ಎಂಬ ತೀರ್ಮಾನಕ್ಕೆ ಜನ ಬರಬೇಕಾಗುತ್ತದೆ,” ಎಂದರು.








