The Kashmir Files | ಕಾಶ್ಮೀರಿ ಪಂಡಿತರ ಹತ್ಯೆ | ಎಸ್ ಐಟಿ ಗೆ ನಿರ್ದೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ
ನವದೆಹಲಿ: ದಿ ಕಾಶ್ಮೀರ್ ಫೈಲ್ಸ್ ಚಿತ್ರ ಸಾಕಷ್ಟು ಸುದ್ದಿಯಲ್ಲಿದ್ದು, ಸಧ್ಯ ಪಂಡಿತರ ಹತ್ಯಾಕಾಂಡದ ಬಗ್ಗೆ ತನಿಖೆ ನಡೆಸಲು ಎಸ್ ಐಟಿ ಗೆ ನಿರ್ದೇಶನ ನೀಡುವಂತೆ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿದೆ.
1990ರಲ್ಲಿ ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಪ್ರಕರಣ ತೆರೆದು ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವಿನೀತ್ ಜಿಂದಾಲ್ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.
33 ವರ್ಷಗಳ ಹಿಂದೆ ನಡೆದ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದ ವಿಷಯಗಳ ಮರು ತನಿಖೆ ನಡೆಸಬಹುದಾದರೆ, 27 ವರ್ಷಗಳ ಹಿಂದೆ ನಡೆದ ಕಾಶ್ಮೀರಿ ಪಂಡಿತರ ಪ್ರಕರಣಗಳನ್ನೂ ಸಹ ಮತ್ತೆ ತನಿಖೆ ನಡೆಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಘಟನೆಯ ಸಂತ್ರಸ್ತರು, ದೈಹಿಕ, ಭಾವನಾತ್ಮಕ ಮತ್ತು ಮಾನಸಿಕ ಆಘಾತದ ಸ್ಥಿತಿಯಲ್ಲಿದ್ದಾರೆ. ಕಳೆದ ಹಲವು ವರ್ಷಗಳಿಂದ ತಮ್ಮ ಜೀವನೋಪಾಯಕ್ಕಾಗಿ ಹೆಣಗಾಡುತ್ತಿದ್ದರಿಂದ ಅವರು ತಮಗೆ ಆಗಿರುವ ಅನ್ಯಾಯಗಳ ಬಗ್ಗೆ ದೂರುಗಳನ್ನು ದಾಖಲಿಸಿಕೊಳ್ಳುವ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ಈಗ ಅವರ ಹೇಳಿಕೆಗಳನ್ನು ದಾಖಲಿಸಿ ನ್ಯಾಯ ನೀಡಬೇಕೆಂದು ಮನವಿ ಮಾಡಿದ್ದಾರೆ.
1989-90ರಲ್ಲಿ ಕಣಿವೆಯಲ್ಲಿ ಉಗ್ರಗಾಮಿಗಳ ಅಟ್ಟಹಾಸ ಉತ್ತುಂಗದಲ್ಲಿದ್ದ ಸಮಯದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ, ಕೃತ್ಯದಲ್ಲಿ ಭಾಗಿಯಾಗಿದ್ದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಸೇರಿದಂತೆ ವಿವಿಧ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಈ ಹಿಂದೆ ಸಲ್ಲಿಸಲಾದ ಮನವಿಯನ್ನು 2019ರಲ್ಲಿ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.
ಅಂದಿನ ಮುಖ್ಯ ನ್ಯಾಯಮೂರ್ತಿ ಜೆ ಎಸ್ ಖೇಹರ್ ಮತ್ತು ನ್ಯಾ. ಡಿ ವೈ ಚಂದ್ರಚೂಡ್ ಅವರ ಪೀಠ, ಪ್ರಕರಣ ನಡೆದು ಸುಮಾರು 27 ವರ್ಷಗಳು ಕಳೆದಿವೆ. ಕಣಿವೆಯಿಂದ ಕಾಶ್ಮೀರಿ ಪಂಡಿತರ ಸಾಮೂಹಿಕ ವಲಸೆಗೆ ಕಾರಣವಾದ ಕೊಲೆ, ಬೆಂಕಿ ಹಚ್ಚುವಿಕೆ ಮತ್ತು ಲೂಟಿ ಪ್ರಕರಣಗಳಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸುವುದು ತುಂಬಾ ಕಷ್ಟ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿತ್ತು.
27 ವರ್ಷದವರೆಗೆ ನೀವು ಸುಮ್ಮನಿದ್ದೀರಿ. ಈಗ ಸಾಕ್ಷ್ಯವು ಎಲ್ಲಿಂದ ಬರುತ್ತದೆ ಎಂದು ನಮಗೆ ತಿಳಿಸಿ ಎಂದು ಪೀಠ ಅರ್ಜಿದಾರರನ್ನು ಖಾರವಾಗಿ ಪ್ರಶ್ನಿಸಿತ್ತು.








