ರಾಜ್ಯದ ಎಲ್ಲಾ ಶಾಲೆಯ ಮಕ್ಕಳಿಗೆ ಮೊಟ್ಟೆ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ
ರಾಜ್ಯದ ಎಲ್ಲಾ ಶಾಲೆಗಳ 1 ರಿಂದ 8ನೇ ತರಗತಿಯ ಮಕ್ಕಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮೊದಲು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಿಗೆ ಮಾತ್ರ ಈ ಮೊಟ್ಟೆ ಯೋಜನೆ ರೂಪಿಸಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಶಾಲೆಗಳಿಗೂ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲಾಗುತ್ತದೆ.
2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಒಪ್ಪಿಕೊಂಡಿದೆ. ಒಂದು ದಿನದ ಘಟಕ ವೆಚ್ಚ 6 ರೂ. ನಂತೆ 46 ದಿನಗಳ ಕಾಲ ಶಾಲೆಗಳಲ್ಲಿ ವಿತರಿಸಲಾಗುತ್ತದೆ. ಇದಕ್ಕಾಗಿ 350 ಕೋಟಿ ರುಪಾಯಿಗಳ ವೆಚ್ಚದ ಅಂದಾಜು ಪಟ್ಟಿಗೆ ಒಪ್ಪಿಗೆ ನೀಡಲಾಗಿದೆ.
ಶಾಲೆಗಳಲ್ಲಿ ಮಕ್ಕಳಿಗೆ ವರ್ಷದ 100 ದಿನ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಿಕ್ಷಣ ಇಲಾಖೆ ಮನವಿ ಸಲ್ಲಿಸಿತ್ತು. ಆದರೆ 100 ದಿನಗಳ ಬದಲು 46 ದಿನಗಳು ಮಾತ್ರ ವಿತರಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಲಾಗಿದೆ.








