ಮುಂಬೈ: ಹೊಟೇಲ್ ನಲ್ಲಿ ಕುಳಿತಿದ್ದ ವ್ಯಕ್ತಿಯನ್ನು 8 ಜನ ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.
ಮೃತನನ್ನು ಅವಿನಾಶ್ ಧನ್ವೆ (31) ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಂದಾಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಹಳೆಯ ದ್ವೇಷದಿಂದ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವಿನಾಶ್ ಧನ್ವೆ ಸಹಿತ ನಾಲ್ವರು ಪುಣೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೋಟೆಲ್ ಜಗದಂಬಾದಲ್ಲಿ ಕುಳಿತಿದ್ದರು. ಧನ್ವೆ ಫೋನಿನಲ್ಲಿ ಮಾತನಾಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಇಬ್ಬರು ಬಂದು ಏಕಾಏಕಿ ಧನ್ವೆ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಇದರಿಂದ ಉಳಿದ ಮೂವರು ಗಾಬರಿಗೊಂಡು ಅಲ್ಲಿಂದ ಪರಾರಿಯಾಗಿದ್ದಾರೆ. ಆನಂತರ ಮನಬಂದಂತೆ ಮಚ್ಚಿನಿಂದ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಪರಿಣಾಮ ವ್ಯಕ್ತಿಯು ಅಲ್ಲಿಯೇ ಸಾವನ್ನಪ್ಪಿದ್ದಾನೆ.
ಧನ್ವೆ ಸಾವನ್ನಪ್ಪುತ್ತಿದ್ದಂತೆಯೇ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗುವುದನ್ನು ಸಿಸಿಟಿವಿ ದೃಶ್ಯದಲ್ಲಿ ಕಾಣಬಹುದಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಗಳ ಮೂಲಕ 8 ಮಂದಿ ದುಷ್ಕರ್ಮಿಗಳನ್ನು ಗುರುತಿಸಿದ್ದೇವೆ. ಸದ್ಯ ಅವರನ್ನು ಬಂಧಿಸಲು ತಂಡಗಳನ್ನು ರಚಿಸಿದ್ದೇವೆ ಎಂದು ಪುಣೆ ಗ್ರಾಮಾಂತರ ಠಾಣೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.