ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಖರ್ಗೆ ಅವರು ತಮ್ಮ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಗುಟ್ಟು ಬಿಟ್ಟುಕೊಟ್ಟಿದ್ದಾರೆ.
ನಮ್ಮ ಮನೆಯಲ್ಲೇ ರಾಜ್ಯ ರಾಜಕೀಯದ ಆಗುಹೋಗುಗಳ ಕುರಿತು ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆದಿದೆ ಎಂದು ಸಚಿವರು ತಿಳಿಸಿದ್ದು, ಈ ಮೂಲಕ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
ರಾಹುಲ್ ಗಾಂಧಿ ನೇರ ಸಂಪರ್ಕ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ನಡುವಿನ ಸಂಪರ್ಕದ ಬಗ್ಗೆ ಸ್ಪಷ್ಟನೆ ನೀಡಿದರು. ಅಗತ್ಯವಿದ್ದಾಗಲೆಲ್ಲಾ ರಾಹುಲ್ ಗಾಂಧಿ ಅವರು ನೇರವಾಗಿ ಕರೆ ಮಾಡಿ ಮಾತನಾಡುತ್ತಾರೆ. ಪಕ್ಷದ ಆಂತರಿಕ ವಿಚಾರಗಳು ಮತ್ತು ಆಡಳಿತದ ಬಗ್ಗೆ ಅವರಿಗೆ ಸಂಪೂರ್ಣ ಮಾಹಿತಿಯಿದೆ. ಹೀಗಿರುವಾಗ ಊಹಾಪೋಹಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದು ಪರೋಕ್ಷವಾಗಿ ಭಿನ್ನಮತೀಯರಿಗೆ ಟಾಂಗ್ ನೀಡಿದರು.
ನಾಯಕತ್ವ ಬದಲಾವಣೆಯ ಚರ್ಚೆ ಅಪ್ರಸ್ತುತ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಬಿಜೆಪಿಯ ಆರೋಪ ಮತ್ತು ಮಾಧ್ಯಮಗಳಲ್ಲಿನ ವರದಿಗಳನ್ನು ಪ್ರಿಯಾಂಕ್ ಖರ್ಗೆ ತಳ್ಳಿಹಾಕಿದರು. ಈ ವಿಚಾರವಾಗಿ ಈಗಾಗಲೇ ಎಐಸಿಸಿ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅತ್ಯಂತ ಸ್ಪಷ್ಟವಾಗಿ ಮಾತನಾಡಿದ್ದಾರೆ. ಹಿರಿಯ ನಾಯಕರೇ ಸ್ಪಷ್ಟನೆ ನೀಡಿದ ಮೇಲೆ ನಾವು ಅಥವಾ ಇನ್ಯಾರೇ ಮಾತನಾಡಿದರೂ ಅದು ಅಪ್ರಸ್ತುತವಾಗುತ್ತದೆ. ಬಿಜೆಪಿಯವರಿಗೆ ವಿರೋಧ ಪಕ್ಷವಾಗಿ ಮಾಡಲು ಕೆಲಸವಿಲ್ಲ, ಹೀಗಾಗಿ ಆರೆಸ್ಸೆಸ್ ನಾಯಕರ ಮುಂದೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಪೈಪೋಟಿ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ದಲಿತ ಮುಖ್ಯಮಂತ್ರಿ ಕೂಗು ಮತ್ತು ಹೈಕಮಾಂಡ್ ನಿರ್ಧಾರ
ದಲಿತ ಮುಖ್ಯಮಂತ್ರಿ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಬಹಳ ಎಚ್ಚರಿಕೆಯ ಉತ್ತರ ನೀಡಿದ ಸಚಿವರು, ಪ್ರಜಾಪ್ರಭುತ್ವದಲ್ಲಿ ಎಲ್ಲ ಸಮುದಾಯದವರಿಗೂ ಅಧಿಕಾರದ ಆಸೆ ಮತ್ತು ಬೇಡಿಕೆ ಇರುವುದು ಸಹಜ. ಅದರಲ್ಲಿ ತಪ್ಪೇನಿಲ್ಲ. ಆದರೆ, ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಪಕ್ಷದ ಶಿಸ್ತಿಗೆ ನಾವೆಲ್ಲರೂ ಬದ್ಧ ಎಂದು ಹೇಳಿದರು.
ಅಬಕಾರಿ ಇಲಾಖೆ ಭ್ರಷ್ಟಾಚಾರ: ದಾಖಲೆ ಇದ್ದರೆ ಕೊಡಿ
ಅಬಕಾರಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಸಚಿವರು ಸವಾಲು ಹಾಕಿದರು. ಕೇವಲ ಆರೋಪ ಮಾಡುವುದರಿಂದ ಪ್ರಯೋಜನವಿಲ್ಲ. ಬಿಜೆಪಿಯವರ ಬಳಿ ಭ್ರಷ್ಟಾಚಾರದ ಬಗ್ಗೆ ನಿಖರವಾದ ದಾಖಲೆಗಳಿದ್ದರೆ ಕೂಡಲೇ ಬಿಡುಗಡೆ ಮಾಡಲಿ ಅಥವಾ ಸದನದಲ್ಲಿ ಮಂಡಿಸಲಿ. ನಾವು ಚರ್ಚೆಗೆ ಸಿದ್ಧರಿದ್ದೇವೆ. ಲೋಕಾಯುಕ್ತ ದಾಳಿ ವೇಳೆ ತಪ್ಪು ಮಾಡಿದ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ತಪ್ಪು ಮಾಡಿದವರು ಯಾರೇ ಆಗಿರಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.
ಬಿಜೆಪಿಗೆ ನೈತಿಕತೆ ಎಲ್ಲಿದೆ?
ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಖರ್ಗೆ, ಈ ಘಟನೆಯನ್ನು ನಾವು ಸಮರ್ಥಿಸಿಕೊಳ್ಳುವುದಿಲ್ಲ. ಈಗಾಗಲೇ ಪಕ್ಷದಿಂದ ಅವರಿಗೆ ನೋಟಿಸ್ ನೀಡಲಾಗಿದೆ ಮತ್ತು ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ, ಈ ಬಗ್ಗೆ ಮಾತನಾಡಲು ಬಿಜೆಪಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು.
ಹಿಂದೆ ಸಿ.ಟಿ. ರವಿ, ಆರ್. ಅಶೋಕ್, ಎಚ್.ಡಿ. ಕುಮಾರಸ್ವಾಮಿ ಹಾಗೂ ದೇವೇಗೌಡರು ಅಧಿಕಾರಿಗಳ ವಿರುದ್ಧ ಯಾವ ರೀತಿಯ ಪದಬಳಕೆ ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಅವೆಲ್ಲವೂ ಸಾರ್ವಜನಿಕವಾಗಿ ದಾಖಲೆಯಾಗಿವೆ. ನಮ್ಮ ಪಕ್ಷ ತಪ್ಪು ಮಾಡಿದವರನ್ನು ರಕ್ಷಿಸುವುದಿಲ್ಲ, ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.








