ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಅವರು ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಸೀಟ್ ಚೋರಿ
ಈ ಘಟನೆಯಿಂದ ತಮಗೆ ಯಾವುದೇ ಆಘಾತ ಅಥವಾ ನಿರಾಶೆಯಾಗಿಲ್ಲ ಎಂದು ಹೇಳಿರುವ ಅವರು, ದೇಶದ ಪ್ರಜಾಪ್ರಭುತ್ವದ ಇಂದಿನ ಸ್ಥಿತಿ ಏನು ಎಂಬುದು ಇಡೀ ದೇಶಕ್ಕೆ ಗೊತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣಾ ಆಯೋಗವು ಸಂಪೂರ್ಣವಾಗಿ ರಾಜಿ ಮಾಡಿಕೊಂಡಿದೆ ಮತ್ತು ವ್ಯವಸ್ಥೆಯ ಜೊತೆ ಕೈಜೋಡಿಸಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಸಂವಿಧಾನದ ತತ್ವಗಳಿಗಾಗಿ ಹೋರಾಡುವವರಿಗೆ ಒಂದು ಕಾನೂನು ಮತ್ತು ಕಾರ್ಪೊರೇಟ್ ಜಗತ್ತಿನ ಪ್ರಭಾವಿಗಳಿಗೆ ಮತ್ತೊಂದು ಕಾನೂನು ಇದೆ ಎನ್ನುವುದು ಈ ಮೂಲಕ ಸಾಬೀತಾಗಿದೆ ಎಂದು ಅವರು ಗುಡುಗಿದ್ದಾರೆ. ಇದನ್ನು ಅವರು ಸೀಟ್ ಚೋರಿ ಅಥವಾ ಸ್ಥಾನದ ಕಳ್ಳತನ ಎಂದು ಬಣ್ಣಿಸಿದ್ದಾರೆ.
ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಏನು?
ಮೀನಾಕ್ಷಿ ನಟರಾಜನ್ ಅವರು ಚುನಾವಣಾಧಿಕಾರಿಯ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್ ಚಂದೂರ್ಕರ್ ಅವರ ದ್ವಿಸದಸ್ಯ ಪೀಠವು, ನಾಮಪತ್ರ ತಿರಸ್ಕೃತಗೊಂಡ ಸಂದರ್ಭದಲ್ಲಿ ನ್ಯಾಯಾಲಯಕ್ಕಿಂತ ಹೆಚ್ಚಾಗಿ ಚುನಾವಣಾ ಆಯೋಗದ ನಿಯಮಾವಳಿಗಳ ಮೂಲಕ ಪರಿಹಾರ ಕಂಡುಕೊಳ್ಳುವುದು ಸೂಕ್ತ ಎಂದು ಹೇಳಿದೆ. ಒಮ್ಮೆ ನಾಮಪತ್ರ ವಜಾಗೊಂಡರೆ ಅಂತಹ ಪ್ರಕರಣಗಳಲ್ಲಿ ನ್ಯಾಯಾಲಯವು ನೇರವಾಗಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.
ನಾಮಪತ್ರ ತಿರಸ್ಕೃತಕ್ಕೆ ಅಸಲಿ ಕಾರಣವೇನು?
ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಮೀನಾಕ್ಷಿ ನಟರಾಜನ್ ಅವರು ತಮ್ಮ ಅಫಿಡವಿಟ್ ನಲ್ಲಿ ಪ್ರಮುಖ ಮಾಹಿತಿಯೊಂದನ್ನು ಮುಚ್ಚಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ನಾಮಪತ್ರದ ಜೊತೆ ಸಲ್ಲಿಸುವ ನಮೂನೆ 26 ರಲ್ಲಿ ನ್ಯಾಯಾಲಯದ ದೂರಿಗೆ ಸಂಬಂಧಿಸಿದ ವಿವರಗಳನ್ನು ಅಪೂರ್ಣವಾಗಿ ನೀಡಿದ್ದ ಕಾರಣ, ಚುನಾವಣಾಧಿಕಾರಿ ಅರವಿಂದ್ ಶರ್ಮಾ ಅವರು ಇವರ ನಾಮಪತ್ರವನ್ನು ಕಾನೂನುಬದ್ಧವಾಗಿ ತಿರಸ್ಕರಿಸಿದ್ದರು.
ಮುಂದಿನ ನಡೆ ಏನು?
ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಮೀನಾಕ್ಷಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಮುಂದಿನ ನಡೆಯನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಮ್ಮ ನಾಯಕರು ಯಾವ ಸೂಚನೆ ನೀಡುತ್ತಾರೋ ಅದನ್ನು ನಾನು ಪಾಲಿಸುತ್ತೇನೆ. ನಾವು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡಲು ಸದಾ ಸಿದ್ಧರಿದ್ದೇವೆ ಎಂದು ಹೇಳುವ ಮೂಲಕ ತಮ್ಮ ಹೋರಾಟ ನಿಲ್ಲದು ಎಂಬ ಸಂದೇಶ ರವಾನಿಸಿದ್ದಾರೆ.








