ಚಿಕ್ಕನಹಳ್ಳಿ ಸಮೀಪದ ಅಮಾನಿಕೆರೆಯಲ್ಲ ಶನಿವಾರ ಈಜಲು ಹೋಗಿದ್ದ ಮೂರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಟ್ಟಣದ ಕೆರೆಕೋಡಿ ರಸ್ತೆ ಹಾಗೂ ಶಿಡ್ಲಘಟ್ಟ ರಸ್ತೆಯಲ್ಲಿ ವಾಸವಾಗಿದ್ದ ಕಾರ್ತಿಕ್ (15), ಗುರುಪ್ರಸಾದ್(16), ಧನುಷ್(10) ಮೃತ ವಿದ್ಯಾರ್ಥಿಗಳನ್ನು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಓದುತ್ತಿದ್ದರು.
ಶನಿವಾರಿ ಶಾಲೆ ಮುಗಿಸಿಕೊಂಡು ಮನೆಗೆ ಬಂದು ಬ್ಯಾಗ್ ಗಳನ್ನು ಮನೆಯಲ್ಲಿಟ್ಟು, ಸೈಕಲ್ ಗಳಲ್ಲಿ ಹೊರಗೆ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮಕ್ಕಳು ಬಾರದೆ ಇರುವುದನ್ನು ಗಮನಿಸಿದ ಪೋಷಕರು ಎಲ್ಲ ಕಡೆ ಹುಡುಕಾಡಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ಬೆಳಿಗ್ಗೆ ಕೆರೆಯಲ್ಲಿ ಸೈಕಲ್ ಗಳು ಪತ್ತೆಯಾಗಿದ್ದು, ನೀರಿನಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದೊಂದಿಗೆ ಮೂರು ಮಕ್ಕಳ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ವಿಜಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ.








