ಉತ್ತರಪ್ರದೇಶ : ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಿದ್ದು, ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ಭರದಿಂದ ಸಾಗಿವೆ.
ಈ ಐತಿಹಾಸಿಕ ಕಾರ್ಯಕ್ರಮದ ವೇಳೆ ಉಗ್ರರು ದಾಳಿ ನಡೆಸುವ ಬಗ್ಗೆ ಗುಪ್ತಚರ ಇಲಾಖೆ ಸುಳಿವು ನೀಡಿದ್ದು, ಅಯೋಧ್ಯೆಯಲ್ಲಿ ಇದೀಗ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಭದ್ರತೆಗಾಗಿ 3,500 ಪೊಲೀಸರ ನಿಯೋಜನೆ ಮಾಡಲಾಗಿದ್ದು, 5 ಸಾವಿರ ಸಿಸಿಟಿವಿ ಅಳವಡಿಸಲಾಗಿದೆ.
ಪ್ರಧಾನಿ ಮೋದಿ ಹೆಲಿಕಾಪ್ಟರ್ ಇಳಿಯುವ ಸ್ಥಳದಿಂದ ಸಾಂಕೇತ್ ಮಹಾವಿದ್ಯಾಲಯದಿಂದ ರಾಮಜನ್ಮ ಭೂಮಿ ಕಾರ್ಯಕ್ರಮ ನಡೆಯುವ ಸ್ಥಳದವರೆಗೆ ಈಗಾಗಲೇ ಸಂಪೂರ್ಣವಾಗಿ ಜನ ಸಂಚಾರ ನಿಷೇಧ ಮಾಡಲಾಗಿದೆ. ಜನ ಸಂಚಾರದ ಮೇಲೆ ನಿಗಾ ಇಡುವ ಉದ್ದೇಶದಿಂದ ಡ್ರೋನ್ ಕ್ಯಾಮೆರಾ ಬಳಕೆ ಮಾಡಲು ನಿರ್ಧಾರ ಮಾಡಲಾಗಿದ್ದು, ಸ್ಥಳೀಯ ರಾಮಕೋಟ್ ನಿವಾಸಿಗಳಿಗೆ ಪಾಸ್ ವಿತರಣೆ ಮಾಡಲಾಗಿದೆ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಉದ್ಧವ್ ಠಾಕ್ರೆ, ಉಮಾ ಭಾರತಿ ಸೇರಿದಂತೆ 300ಕ್ಕೂ ಹೆಚ್ಚು ಗಣ್ಯರು ಭಾಗಿಯಾಗುತ್ತಿದ್ದಾರೆ. ಆಗಸ್ಟ್ 15ರವರೆಗೂ ಈ ಪೊಲೀಸ್ ಭದ್ರತೆ ಮುಂದುವರೆಯುವ ಸಾಧ್ಯತೆ ಇದೆ.