ಹಾಸನ: ಕೌಟುಂಬಿಕ ಕಲಹಕ್ಕೆ ಬೇಸತ್ತ ಟೆಕ್ಕಿ (Engineer) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ (Hassan) ಶೆಟ್ಟಿಹಳ್ಳಿ ಗ್ರಾಮದ ಹತ್ತಿರದ ಹೇಮಾವತಿ ನದಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹಾಸನದ ಇಂದಿರಾನಗರದ ನಿವಾಸಿ ಪ್ರಮೋದ್ (35) ಎಂದು ಗುರುತಿಸಲಾಗಿದೆ.
ಪ್ರಮೋದ್ ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದರು ಎನ್ನಲಾಗಿದೆ. ಪತ್ನಿ ಪ್ರತಿ ದಿನ ಜಗಳ ಮಾಡುತ್ತಿದ್ದರು ಎನ್ನಲಾಗಿದ್ದು, ಆಕೆಯ ಸಹೋದರರು ಕೂಡ ಪ್ರಮೋದ್ ಜೊತೆ ಕಿರಿಕ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಡಿ.29 ರಂದು ಸಂಜೆ ಪ್ರಮೋದ್ ಮನೆಯಲ್ಲಿಯೇ ಮೊಬೈಲ್ ಬಿಟ್ಟು ತೆರಳಿದ್ದರು. ಪ್ರಮೋದ್ ಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಅಲ್ಲದೇ, ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು. ಆದರೆ, ಅಂದೇ ರಾತ್ರಿ ಹೇಮಾವತಿ ನದಿಯ ಸೇತುವೆ ಬಳಿ ಪ್ರಮೋದ್ ಬೈಕ್ ಪತ್ತೆಯಾಗಿತ್ತು. ಅದನ್ನು ಕಂಡ ಸ್ಥಳೀಯರು ಪರಿಶೀಲನೆ ನಡೆಸಿದಾಗ ನದಿಯ ಬಳಿ ದ್ವಿಚಕ್ರ ವಾಹನ ನಿಂತಿರುವ ಕುರಿತು ಗೊತ್ತಾಗಿದೆ.
ಕೂಡಲೇ ನದಿಯಲ್ಲಿ ಪೊಲೀಸರು (Police) ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಬುಧವಾರ ಬೆಳಗ್ಗೆ ಪ್ರಮೋದ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








