ಬೆಂಗಳೂರು: ರಾಜ್ಯ ವಿಧಾನ ಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿಧಾನಸಭೆ ಮತ್ತು ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನ ಉದ್ಧೇಶಿಸ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಅವರ ಭಾಷಣದ ಮೂಲಕ ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡುವ ಕಾರ್ಯವನ್ನು ಕೂಡ ರಾಜ್ಯ ಸರ್ಕಾರ ಮಾಡಿದೆ.
ಸರ್ಕಾರ ನುಡಿದಂತೆ ನಡೆದಿದೆ. ಕೊಟ್ಟ ವಚನ ಪಾಲಿಸಿದೆ. ಜನರ ಪ್ರೀತಿ, ವಿಶ್ವಾಸ, ಭರವಸೆಗಳಿಗೆ ಧಕ್ಕೆಯಾಗದೆ ನಡೆದುಕೊಳ್ಳುವಲ್ಲಿಯ ಯಶಸ್ವಿಯಾಗಿದೆ. ಏಳು ಕೋಟಿ ಜನರ ಬದುಕಿನಲ್ಲಿ ಬದಲಾವಣೆ ಗಾಳಿ ಬೀಸುವಂತೆ ಮಾಡಿದೆ. ಪಂಚ ಗ್ಯಾರಂಟಿಗಳು ಆರ್ಥಿಕ ಅಸಮಾನತೆಯಿಂದ ಬಸವಳಿದ ಜನರಿಗೆ ಸಾಂತ್ವನ ನೀಡಿದೆ ಎಂದು ಹೇಳಿದ್ದಾರೆ.
ಬರಗಾಲವಿದ್ದರೂ ರೈತರ ಆತ್ಮಹತ್ಯೆ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಸರ್ಕಾರವು 8 ತಿಂಗಳಲ್ಲಿಯೇ ಗಮನಾರ್ಹ ಸಾಧನೆ ಮಾಡಿದೆ. ಸರ್ಕಾರದ ಗ್ಯಾರಂಟಿಗಳ ಬಗ್ಗೆ ದೇಶ-ವಿದೇಶಗಳ ಮಾಧ್ಯಮಗಳು ಕೂಡ ಶ್ಲಾಘಿಸಿವೆ. ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ, ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಪಾಲು ಪಡೆಯಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.