ಭುವನೇಶ್ವರ: ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಿಜೆಪಿ ನಾಯಕರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಒಡಿಶಾದ (Odisha) ಸಂಬಲ್ಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದವರನ್ನು ದೇಬೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಬಿಜೆಪಿಯ ಹಿರಿಯ ನಾಯಕಿ ನೌರಿ ನಾಯ್ಕ್ಗೆ ಆಪ್ತರಾಗಿದ್ದರು.
ಬುರ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎನ್ಎಚ್ 53ನಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಆರು ಜನರಿದ್ದರು. ಭುವನೇಶ್ವರದಿಂದ ಕಾರ್ಡೋಲಾದಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಅಪಘಾತ ನಡೆಯುತ್ತಿದ್ದಂತೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ.
ವಾಹನವು ನಮ್ಮ ಕಾರಿಗೆ ಎರಡು ಬಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಯಾರೋ ಉದ್ದೇಶಪೂರ್ವಕವಾಗಿ ನಮ್ಮ ವಾಹನವನ್ನು ಡಿಕ್ಕಿ ಹೊಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಚಾಲಕ ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








