2025ರ ವೇಳೆಗೆ ಕ್ಷಯ ಮುಕ್ತ ಭಾರತ – ಸಚಿವ ಡಾ.ಜಿತೇಂದ್ರ ಸಿಂಗ್
ವಿಶ್ವ ಕ್ಷಯರೋಗ ನಿವಾರಣಾ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿಂದು ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ , ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಶಸ್ಸು ಕಾಣಲು ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಎಲ್ಲರ ಪಾಲ್ಗೊಳ್ಳುವಿಕೆಯಿಂದ ಸಾಮಾಜಿಕ ಕ್ಷೇತ್ರದಲ್ಲಿ ನಮ್ಮ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ , ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಎನ್ನುವ ಹಾಗೆ ಸಮಾಜದ ಒಗ್ಗೂಡುವಿಕೆಯಿಂದ ಸಾಮಾಜಿಕ ಕ್ಷೇತ್ರದಲ್ಲಿ ಬದಲಾವಣೆ ತರಲು ಪರಿವರ್ತನೆ ಮಾಡಲು ಸಾಧ್ಯವಾಗುತ್ತದೆ ಎಂದು ಮನ್ಸುಖ್ ಮಾಂಡವಿಯಾ ಹೇಳಿದರು.
ಇದೇ ಕಾರ್ಯಕ್ರಮದಲ್ಲಿ ಸಚಿವ ಡಾ.ಜಿತೇಂದ್ರ ಸಿಂಗ್, ಶತಮಾನಗಳಷ್ಟು ಹಳೆಯದಾದ ಈ ರೋಗವು ಈಗಲೂ ಜಗತ್ತಿನ ಅತ್ಯಂತ ಅಪಾಯಕಾರಿ ಸಾಂಕ್ರಾಮಿಕ ರೋಗವಾಗಿದೆ. ಕೊರೊನಾ ಸೋಂಕು ಹಲವರಿಗೆ ಬಾಧಿಸಿ, ಅನೇಕರನ್ನು ಬಲಿ ಪಡೆದುಕೊಂಡಿತು. ಈ ಅವಧಿಯಲ್ಲಿ ಕ್ಷಯರೋಗದಂತಹ ಅನೇಕ ರೋಗಗಳು ಹೆಚ್ಚಾದವು. ಕಳೆದ ದಶಕದಲ್ಲಿ ಇದೇ ಮೊದಲ ಬಾರಿಗೆ ವಿಶ್ವಾದ್ಯಂತ ಟಿಬಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಭಾರತದಲ್ಲಿ ಕ್ಷಯರೋಗವನ್ನು ಕೊನೆಗಾಣಿಸುವ ಸಲುವಾಗಿ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಶೃಂಗಸಭೆಯಲ್ಲಿ 2025ರ ವೇಳೆಗೆ ಭಾರತವನ್ನು ಕ್ಷಯ ಮುಕ್ತಗೊಳಿಸುವುದಾಗಿ ಘೋಷಿಸಲಾಗಿದೆ. ಕೇಂದ್ರ ಸರಕಾರವು ಕ್ಷಯರೋಗ ನಿವಾರಣೆಗಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಕ್ಷಯರೋಗ ಮುಕ್ತಿಗಾಗಿ ಪ್ರತಿ ಒಬ್ಬರು ಶ್ರಮಿಸಬೇಕಾಗಿದ್ದು, ಜೀವ ಸಂಕುಲವನ್ನು ಕಾಪಾಡಬೇಕಾಗಿದೆ ಎಂದರು.