ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅವರನ್ನು ನಕಲಿ ಗಾಂಧಿ, ಪಾಕ್ ಪರ ಏಜೆಂಟ್ ಎಂದು ನಾಲಿಗೆ ಹರಿಬಿಟ್ಟಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಸಮರ ಸಾರಿದ್ದು, ಇಂದು ಕೂಡ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಯತ್ನಾಳ್ ಅವರ ನೈತಿಕತೆಯನ್ನು ಪ್ರಶ್ನೆ ಮಾಡುವಂತೆ ಸಿದ್ದರಾಮಯ್ಯ ಕಾಂಗ್ರೆಸ್ ಸದಸ್ಯರಿಗೆ ಸೂಚಿಸಿದ್ದಾರೆ. ಇದಲ್ಲದೆ ಯತ್ನಾಳ್ ವಿರುದ್ಧ ಕ್ರಿಮಿನಲ್, ವಂಚನೆ ಪ್ರಕರಣ ಸೇರಿದಂತೆ 43 ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ ದನಿ ಎತ್ತಲು ಕೈ ನಾಯಕರು ಮುಂದಾಗಿದ್ದಾರೆ.
ಸಿಎಲ್ ಪಿ ಮೀಟಿಂಗ್ ನಲ್ಲಿ ಸಿದ್ದರಾಮಯ್ಯ ರಣತಂತ್ರ
ಇಂದಿನ ಸಿಎಲ್ ಪಿ ಮೀಟಿಂಗ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಅವರು ಸಂಸ್ಕೃತಿಯ ವಾರಸುದಾರರಂತೆ ವರ್ತಿಸುತ್ತಾಯತ್ನಾಳ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಕನಿಷ್ಟ ಸೌಜನ್ಯಕ್ಕಾದರೂ ಕ್ಷಮೆ ಯಾಚಿಸುವ ಬಗ್ಗೆ ಮಾತನಾಡುತ್ತಿಲ್ಲ. ಸ್ವಾತಂತ್ರ್ಯ ಸೇನಾನಿಗಳಿಗೇ ಈ ರೀತಿಯಾದರೆ ನಾವು ಸುಮ್ಮನೆ ಕೂರುವುದು ಸರಿಯಲ್ಲ. ಹೋರಾಟವನ್ನು ಮುಂದುವರಿಸೋಣ ಎಂಬ ಕೈ ಶಾಸಕರಿಗೆ ಕರೆ ನೀಡಿದ್ದಾರೆ.