ಉಡುಪಿ: ಕೃಷ್ಣನ ತವರೂರು ಉಡುಪಿಯಲ್ಲಿ ನಾಳೆ(ಗುರುವಾರ) ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮೇಳೈಸಲಿದೆ.
ಕೃಷ್ಣನ ಜನ್ಮಾಷ್ಟಮಿ ನಂತರದ ಶುಕ್ರವಾರ ರಥಬೀದಿಯಲ್ಲಿ ವಿಟ್ಲಪಿಂಡಿ ಮಹೋತ್ಸವ ಜರುಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರದ ಗೈಡ್ಲೈನ್ಸ್ ಇರುವ ಕಾರಣ ಈ ಎರಡೂ ದಿನದ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಅವಕಾಶ ಇಲ್ಲ.
ನಾಳೆಯಿಂದ ಸೆಪ್ಟೆಂಬರ್ 21ರವರೆಗೆ ನೂರು ಜನ ಸೇರುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ. ಹೀಗಾಗಿ ಉಡುಪಿ ಕೃಷ್ಣಮಠ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕಾಗುತ್ತದೆ. ರಥಬೀದಿಯಲ್ಲಿ ಸಾವಿರಾರು ಜನ ಸೇರಿ ಆಚರಿಸುವ ವಿಟ್ಲಪಿಂಡಿ ಆಚರಣೆಗೆ ಜನ ಸೇರುವ ಅವಕಾಶವೂ ಇಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ವೇಷ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವಕಾಶ ಇಲ್ಲ. ಪೊಲೀಸ್ ನಿಯೋಜನೆ ಮಾಡಿ ಸಾರ್ವಜನಿಕ ಪಾಲ್ಗೊಳ್ಳುವಿಕೆಗೆ ಅವಕಾಶ ಕೊಡುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
ಈ ವಿಚಾರವಾಗಿ ಶ್ರೀಕೃಷ್ಣ ಮಠದ ಪರ್ಯಾಯ ಅದಮಾರು ಸ್ವಾಮೀಜಿ ಜೊತೆ ಮಾತನಾಡಿದ್ದೇನೆ. ಸರ್ಕಾರದ ನಿಯಮವನ್ನು ಪಾಲಿಸುವುದಾಗಿ ಸ್ವಾಮೀಜಿ ಒಪ್ಪಿಕೊಂಡಿದ್ದಾರೆ. ಸಾಂಪ್ರದಾಯಿಕ ರೀತಿಯಲ್ಲಿ ಅಷ್ಟಮಿ ಮತ್ತು ವಿಟ್ಲಪಿಂಡಿ ಆಚರಣೆ ನಡೆಯುತ್ತದೆ. ಕೃಷ್ಣ ಮಠಕ್ಕೆ ಬರುವ ಸಾರ್ವಜನಿಕ ರಸ್ತೆಗಳನ್ನು ಬಂದ್ ಮಾಡುತ್ತೇವೆ. ಮಠದ ಸುತ್ತಲ ಎಲ್ಲಾ ರಸ್ತೆಗಳಲ್ಲಿ ಪೊಲೀಸ್ ನಿಯೋಜನೆ ಮಾಡುತ್ತೇವೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅಷ್ಟಮಿ ಮತ್ತು ವಿಟ್ಲಪಿಂಡಿಯಂದು ಯಾವುದೇ ವೇಷಗಳಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಅವಕಾಶ ಇಲ್ಲ. ಮಠದ ಸಿಬ್ಬಂದಿ ಮೊಸರು ಕುಡಿಕೆಯನ್ನು ಸಾಂಪ್ರದಾಯಕವಾಗಿ ನಡೆಸುತ್ತಾರೆ. ಅದನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನಿರಾಕರಿಸಲಾಗಿದೆ.