Gyanavapi mosque row: ಹಿಂದುಗಳ ಅರ್ಜಿ ಪುರಸ್ಕರಿಸಿದ ಕೋರ್ಟ್ – ವಿಚಾರಣೆ ಮುಂದೂಡಿಕೆ..
ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪೂಜೆ ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಹಿಂದೂಗಳ ಪರವಾಗಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಕೈಗೆತ್ತಿಕೊಂಡಿದೆ. ಹಿಂದೂ ಅರ್ಜಿಯನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 22ಕ್ಕೆ ಮುಂದೂಡಲಾಯಿತು.
“ಅರ್ಜಿಯನ್ನು ಅರ್ಹವೆಂದು ಪರಿಗಣಿಸಿ ನ್ಯಾಯಾಲಯವು ಮುಸ್ಲಿಮರ ವಾದವನ್ನು ವಜಾಗೊಳಿಸಿದೆ. ಮುಂದಿನ ವಿಚಾರಣೆಯನ್ನು ಸೆ.22ರಂದು ನಡೆಸಲಾಗುವುದು’’ ಎಂದು ಹಿಂದೂಗಳ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದರು. ಮುಂದಿನ ಮೇಲ್ಮನವಿಗಾಗಿ ಮುಸ್ಲಿಂ ಅರ್ಜಿದಾರರು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸುವ ಸಾಧ್ಯತೆಯಿದೆ ಎಂದು ಅರ್ಜಿದಾರ ಸೋಹನ್ ಲಾಲ್ ಆರ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಹಿಂದೆ ಮಸೀದಿ ಆವರಣದಲ್ಲಿ ಹಿಂದೂ ದೇವತೆಗಳನ್ನು ಪೂಜಿಸಲು ಅನುಮತಿ ಕೋರಿ ಕೆಲವು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ವಿಶೇಷ ಸಮಿತಿಯು ವಿಡಿಯೋ ಸಮೀಕ್ಷೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ನ ಆದೇಶದಂತೆ ಜ್ಞಾನವಾಪಿ ಪ್ರಕರಣವು ಜಿಲ್ಲಾ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿತು. ಏತನ್ಮಧ್ಯೆ, ಜ್ಞಾನವಾಪಿ-ಶೃಂಗಾರ್ ಗೌರ್ ಪ್ರಕರಣದಲ್ಲಿ, ನ್ಯಾಯಾಲಯವು ಸೋಮವಾರ ಆದೇಶ ನೀಡಲಿರುವ ಕಾರಣ ವಾರಣಾಸಿಯಲ್ಲಿ ಮುಂಚಿತವಾಗಿ ನಿಷೇಧಾಜ್ಞೆ ಜಾರಿಗೆ ತರಲಾಯಿತು. ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಲಕ್ನೋ ಪೊಲೀಸರು ವಾರಣಾಸಿಯಲ್ಲಿ ಧ್ವಜ ಮೆರವಣಿಗೆ ನಡೆಸಿದರು.








