ದಾವಣಗೆರೆ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 24ನೇ ರಾಷ್ಟ್ರೀಯ ಸಮಾವೇಶವು ಡಿ. 23 ಹಾಗೂ 24ರಂದು ದಾವಣಗೆರೆಯಲ್ಲಿ ನಡೆಯಲಿದೆ ಎಂದು ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಈಶ್ವರ ಖಂಡ್ರೆ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಹಿಂದೆ ಪ್ರತಿ 5 ವರ್ಷಗಳಿಗೊಮ್ಮೆ ಈ ಸಮಾವೇಶ ನಡೆಯುತ್ತಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ 2023ರ ಆರಂಭದಲ್ಲಿ ಕಾರ್ಯಕ್ರಮ ಮುಂದೂಡಲಾಗಿತ್ತು. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದೂಡಲಾಗಿತ್ತು. ಈಗ ಡಿ. 23 ಹಾಗೂ 24ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮದ ವಿಧಾನಗಳ ಕುರಿತು ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಶಿವಶಂಕರಪ್ಪ ಅವರು, ವೀರಶೈವ-ಲಿಂಗಾಯತರಲ್ಲಿ ಒಗ್ಗಟ್ಟು ಮೂಡಿಸುವುದಕ್ಕಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.