ಹಿರಿಯ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ, ಇಂದು ಸಂಜೆ ಅಂತ್ಯ ಸಂಸ್ಕಾರ..
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಡಿ.ಎಸ್.ನಾಗಭೂಷಣ್ 1952 ಫೆಬ್ರವರಿ 1ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನ ಪೂರೈಸಿದ್ದಾರೆ. ಸುಮಾರು 30 ವರ್ಷಗಳ ಕಾಲ ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ್ದಾರೆ. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.
ಇಂದಿಗೆ ಬೇಕಾದ ಗಾಂಧಿ, ಲೋಹಿಯಾ ಜೊತೆಯಲ್ಲಿ, ರೂಪ ರೂಪಗಳನು ದಾಟಿ, ಕುವೆಂಪು ಒಂದು ಪುನರನ್ವೇಷಣೆ, ಕುವೆಂಪು ಸಾಹಿತ್ಯ ದರ್ಶನ, ಜಯಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ, ನಮ್ಮ ಶಾಮಣ್ಣ, ಕನ್ನಡದ ಮನಸು ಮತ್ತು ಇತರ ಲೇಖನಗಳು ಹಾಗೂ ಕಾಲಕ್ರಮ, ಗಮನ, ಅನೇಕ, ಈ ಭೂಮಿಯಿಂದ ಆ ಆಕಾಶದವರೆಗೆ, ಮರಳಿ ಬರಲಿದೆ ಸಮಾಜವಾದ, ವಸಿಷ್ಠರು ಮತ್ತು ವಾಲ್ಮೀಕಿಯರು, ಹಣತೆ (ಜಿಎಸ್ಸೆಸ್ ಅಭಿನಂದನೆ ಗ್ರಂಥ), ಗಾಂಧಿ ಕಥನ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ.
ಇವರ ಗಾಂಧಿ ಕಥನ ಕೃತಿ ಇತ್ತೀಚೆಗಷ್ಟೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರವಾಗಿತ್ತು.
ನಾಗಭೂಷಣ್ ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರು. ಸದ್ಯ ಶಿವಮೊಗ್ಗದ ವಿನೋಬನಗರದ ಕಲ್ಲಹಳ್ಳಿಯಲ್ಲಿ ಪತ್ನಿ ಲೇಖಕಿ ಸವಿತಾ ನಾಗಭೂಷಣ ಅವರೊಂದಿಗೆ ನೆಲೆಸಿದ್ದರು
ಮೃತ ಡಿ.ಎಸ್.ನಾಗಭೂಷಣ್ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಚಿತಾಗಾರದಲ್ಲಿ ನಡೆಯಲಿರುವುದು. ಅಲ್ಲಿಯವರೆಗೂ ಕಲ್ಲಹಳ್ಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.