ಬೆಂಗಳೂರು : ಹಲವಾರು ವಿರೋಧ ಪ್ರತಿರೋಧದ ನಡುವೆಯೂ ಬಳ್ಳಾರಿ ಜಿಲ್ಲೆ ವಿಭಜನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗ್ತಿದೆ. ಸರ್ಕಾರದ ಈ ನಿರ್ಧಾರ ಕೆಲವರ ಸಂಭ್ರಕ್ಕೆ ಕಾರಣವಾಗಿದ್ರೆ, ಅನೇಕರ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ.
ಇನ್ನೂ ನವೆಂಬರ್ 1 ರಂದು ಅಂದ್ರೆ ಕನ್ನಡರಾಜ್ಯೋತ್ಸದಂದೇ ವಿಜಯನಗರವನ್ನ ಹೊಸ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತೆ ಎನ್ನುವ ಗುಮಾನಿ ಎದ್ದಿದೆ. ವಿಜಯನಗರ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಅಸ್ತು ಎಂದಿದ್ದು, 31 ನೇ ಜಿಲ್ಲೆಯಾಗಿ ವಿಜಯನಗರ ನೂತನ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ.
ವಿಜಯನಗರ ಜಿಲ್ಲೆ ಘೋಷಣೆ ಸಂಬಂಧ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಹೊಸ ವಿಜಯನಗರ ಜಿಲ್ಲೆ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ, ಹರಪನಹಳ್ಳಿ ತಾಲೂಕುಗಳನ್ನು ಒಳಗೊಂಡಿರಲಿದೆ ಎನ್ನಲಾಗ್ತಿದೆ.








