ಲಕ್ನೋ: ಉತ್ತರ ಪ್ರದೇಶದ (Uttar Pradesh) ಬಹ್ರೈಚ್ನಲ್ಲಿ (Bahraich) ದುರ್ಗಾ ಪೂಜೆ ಸಂದರ್ಭದಲ್ಲಿ ನಡೆದಿದ್ದ ಹಿಂಸಾಚಾರದ (Durga Puja Violence) ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸರ್ಫರಾಜ್ ಎಂದು ಗುರುತಿಸಲಾಗಿದೆ. ಆತನನ್ನು ನೇಪಾಳ ಗಡಿಯಲ್ಲಿ ಬಂಧಿಸಲಾಗಿದೆ. ಬಂಧನದ ವೇಳೆ ಆತ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಗುಂಡೇಟು ನೀಡಿದ್ದಾರೆ. ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಸರ್ಫರಾಜ್ ಹಾಗೂ ಮತ್ತೋರ್ವ ಆರೋಪಿ ತಾಲಿಬ್ ಗಾಯಗೊಂಡಿದ್ದಾರೆ. ಆರೋಪಿಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.
ಅ.13ರ ಸಂಜೆ ಉತ್ತರಪ್ರದೇಶದ ಮನ್ಸೂರ್ ಗ್ರಾಮದ ಮಹರಾಜ್ಗಂಜ್ ಪ್ರದೇಶದಲ್ಲಿ ದುರ್ಗಾದೇವಿ ವಿಗ್ರಹ ವಿಸರ್ಜನಾ ಮೆರವಣಿಗೆಯಲ್ಲಿ ಧ್ವನಿವರ್ಧಕ ಬಳಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಕೋಮು ಘರ್ಷಣೆ ನಡೆದಿತ್ತು. ಈ ವೇಳೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಘಟನೆಯನ್ನು ಖಂಡಿಸಿದ್ದಾರೆ.