ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ 50,000 ರೂಪಾಯಿ ವರೆಗಿನ ಸಾಲವನ್ನು ತಕ್ಷಣವೇ ಮನ್ನಾ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಆರ್ ಅಶೋಕ್, ಇತ್ತೀಚೆಗೆ ನೀವು ಬರಪೀಡಿತ ರೈತರ ಸಾಲಮನ್ನಾ ಕುರಿತು ಪರಿಶೀಲನೆ ನಡೆಸುವುದಾಗಿ ಹೇಳಿಕೆ ನೀಡಿದ್ದೀರಿ. ಆದರೆ, ಪ್ರಸ್ತುತ ಪರಿಸ್ಥಿತಿಯಲ್ಲಿ ರೈತರಿಗೆ ಬೇಕಾಗಿರುವುದು ಬರೀ ಭರವಸೆಯ ಪರಿಶೀಲನೆ ಅಲ್ಲ, ಬದಲಿಗೆ ತಕ್ಷಣದ ದೃಢ ನಿರ್ಧಾರ. ಆದ್ದರಿಂದ ಯಾವುದೇ ವಿಳಂಬ ಮಾಡದೆ ಬರ ಮತ್ತು ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಎಲ್ಲಾ ರೈತರ 50 ಸಾವಿರ ರೂಪಾಯಿ ವರೆಗಿನ ಸಾಲವನ್ನು ತಕ್ಷಣವೇ ಮನ್ನಾ ಮಾಡುವ ಘೋಷಣೆ ಹೊರಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಬರ ಪರಿಹಾರ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರ ಕೂಡಲೇ ಹತ್ತು ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಬೇಕೆಂದು ಕೈಗೊಂಡಿರುವ ನಿರ್ಣಯವನ್ನು ಆರ್ ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ನಿರ್ಣಯ ಅತ್ಯಂತ ಬೇಜವಾಬ್ದಾರಿಯುತ ಮತ್ತು ದುರದೃಷ್ಟಕರ ಎಂದು ಅವರು ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವು ತನ್ನ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ರೈತರ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರದ ವಿರುದ್ಧ ಇಂತಹ ರಾಜಕೀಯ ಪ್ರೇರಿತ ನಿರ್ಣಯಗಳನ್ನು ಅಂಗೀಕರಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಒಂದೆಡೆ ಹಲವಾರು ಜಿಲ್ಲೆಗಳು ತೀವ್ರ ಬರಗಾಲದಿಂದ ತತ್ತರಿಸುತ್ತಿದ್ದರೆ, ಮತ್ತೊಂದೆಡೆ ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದ ಆತಂಕ ಎದುರಾಗಿದೆ. ಲಕ್ಷಾಂತರ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಭಾಗದ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರದ ತುರ್ತು ನೆರವಿಗಾಗಿ ಕಾದು ಕುಳಿತಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರ ಕೇವಲ ಕಾಲಹರಣ ಮಾಡದೆ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂದು ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.







