ಬೆಂಗಳೂರು : ಕೊರೊನಾ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ಮೋದಿ ಮೇ 3 ರವರೆಗೆ ಲಾಕ್ ಡೌನ್ ವಿಸ್ತರಿಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಪ್ರಧಾನಿಯ ಕರೆಯನ್ನು ಗೌರವಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ಇದರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಕೈಗೊಂಡಿರುವ ನಿರ್ಣಯಕ್ಕೆ ನಮ್ಮ ಬೆಂಬಲವಿದೆ ಎಂದರು. ಇನ್ನು ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೇಶದಲ್ಲಿ ಆರ್ಥಿಕ ಸ್ಥಿತಿ ಕುಸಿದಿದೆ. ಹೀಗಿರುವಾಗ ರಾಜ್ಯಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ್ದರೆ ಅನುಕೂಲವಾಗುತ್ತಿತ್ತು. ಈ ಬಗ್ಗೆ ನಿರೀಕ್ಷೆ ಇತ್ತು. ಆದರೆ, ಪ್ರಧಾನಿ ಯಾವುದೇ ವಿಶೇಷ ಸೌಲಭ್ಯ ಘೋಷಿಸಿಲ್ಲ. ಆದರೂ ಪ್ರಧಾನಿ ಕೈಗೊಂಡಿರುವ ಕ್ರಮಕ್ಕೆ ನಾವು ಸಹಕಾರ ಕೊಡುತ್ತೇವೆ ಎಂದರು.
ಇನ್ನು ದೇಶದಲ್ಲಿ ಎದುರಾಗಿರುವ ದುಸ್ಥಿತಿಯಿಂದಾಗಿ ಕೆಲ ವರ್ಗಗಳು ಸಂಕಷ್ಟದಲ್ಲಿವೆ. ಅಂತಹವರಿಗೆ ಮಾನಸಿಕವಾಗಿ ಶಕ್ತಿ ತುಂಬಬೇಕಿದೆ. ಇದು ಪ್ರದಾನಿ ಸೇರಿದಂತೆ ಎಲ್ಲರ ಕರ್ತವ್ಯವಾಗಿದೆ ಎಂದರು. ವಿದೇಶಗಳಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್ ಗಳು, ಹಾಗೂ ಸಿಬ್ಬಂದಿಗೆ ವಿಶೇಷ ಕಿಟ್ ಗಳನ್ನು ನೀಡಲಾಗುತ್ತಿದೆ. ಅದರಂತೆಯೇ ನಮ್ಮಲ್ಲೂ ಇಂತಹ ಕಿಟ್ ಗಳನ್ನು ವಿತರಿಸುವುದು ಅತ್ಯವಶ್ಯಕವಾಗಿದೆ. ಆಸ್ಪತ್ರೆಗಳಲ್ಲಿ ಹಗಲಿರುಳು ದುಡಿಯುತ್ತಿರುವ ವೈದ್ಯರು, ಸಹಾಯಕರು, ಸೇರಿದಂತೆ ಅವರ ಕುಟುಂಬ ಸದಸ್ಯರಿಗೆ ಆರೋಗ್ಯ ಭದ್ರತೆ ಒದಗಿಸಬೇಕಿದೆ ಎಂದು ಆಗ್ರಹಿಸಿದರು.








