ಬಾಗಲಕೋಟೆ : ಪರಿಶಿಷ್ಟ ಪಂಗಡದವರಿಗೆ ಶೇ 7.5 ಮೀಸಲಾತಿ ನೀಡುವ ಬಗ್ಗೆ ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯಿಸಿದ್ದು, ಪರಿಶಿಷ್ಟ ಪಂಗಡದವರಿಗೆ ಶೇ 7.5 ಮೀಸಲಾತಿ ಕೊಡುವ ವಿಚಾರ ಮುಖ್ಯಮಂತ್ರಿ ತೀರ್ಮಾನ ಮಾಡ್ತಾರೆ ಎಂದಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದೆ. ಸಂಪುಟ ಸಹೋದ್ಯೋಗಿಗಳು, ಆ ಸಮುದಾಯ ಸಚಿವರು ಸೇರಿ ಸಾಧಕ ಬಾಧಕ ಚರ್ಚೆ ಮಾಡಲಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾಣ ಮಾಡುತ್ತಾರೆ ಎಂದರು.
ಇದೇ ವೇಳೆ ಡ್ರಗ್ ಮಾಫಿಯಾ ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರ ಮೇಲೆ ಸಚಿವರೊಬ್ಬರು ಪ್ರಭಾವ ಬೀರುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಭೈರತಿ ಬಸವರಾಜ ಪ್ರತಿಕ್ರಿಯಿಸಿ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೇಟು ಹಾಕುವುದಿಲ್ಲ. ಈಗಾಗಲೇ ಗೃಹ ಸಚಿವರು ಈ ಬಗ್ಗೆ ಎಲ್ಲಾ ಕ್ರಮ ಕೈಗೊಂಡು, ಮಾಹಿತಿ ಕೊಟ್ಟಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಭೈರತಿ, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಪರಮಾಧಿಕಾರ. ಅವರ ವಿವೇಚನೆಗೆ ಬಿಟ್ಟಿದ್ದು. ಸಿಎಂ ನಿರ್ಧಾರಕ್ಕೆ ನಾವೆಲ್ಲ ಬದ್ಧ. ನಮ್ಮ ಜೊತೆ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಡಬಹುದು, ಕೊಡದೇ ಇರಬಹುದು. ಅದು ಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು,ಅವ್ರು ಏನೇ ತೀರ್ಮಾನ ತೆಗೆದುಕೊಂಡ್ರು ನಾವು ಬದ್ಧ ಎಂದರು.