ಮಂಡ್ಯ: ಜೆಡಿಎಸ್ (JDS) ಪಕ್ಷ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ನಾರಾಯಣ ಗೌಡ (Naryana Gowda) ಈಗ ಕಾಂಗ್ರೆಸ್ ಸೇರುತ್ತಾರೆ ಎಂಬ ಪ್ರಶ್ನೆ ಕಾಡುತ್ತಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲಿಯೇ ಅಸಮಾಧಾನಗೊಂಡಿರುವ ನಾರಾಯಣ ಗೌಡ ಈಗ ಕಾಂಗ್ರೆಸ್ (Congress) ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆಗಳು ಶುರುವಾಗಿವೆ. ಪೂರಕ ಎಂಬಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ನಾರಾಯಣ ಗೌಡ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಮಂಡ್ಯ (Mandya) ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು. ಇಲ್ಲವಾದಲ್ಲಿ ನಾನು ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ನಾರಾಯಣಗೌಡ ಹಿಂದೆ ಬಹಿರಂಗವಾಗಿ ಹೇಳಿದ್ದರು. ಆದರೆ, ಬಹುತೇಕವಾಗಿ ಮಂಡ್ಯ ಜಿಲ್ಲೆ ಜೆಡಿಎಸ್ ಪಾಲಾಗಿದೆ ಎನ್ನಲಾಗುತ್ತಿದ್ದು, ನಾರಾಯಣಗೌಡ ಬೇಸರಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಅಲ್ಲದೇ, ಸಿಎಂ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿದ ಸಂದರ್ಭದಲ್ಲಿ ನನಗೆ ಮಂಡ್ಯ ಟಿಕೆಟ್ ನೀಡಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಸಿಎಂ ಮೊದಲು ಪಕ್ಷ ಸೇರು, ಮುಂದೆ ಒಳ್ಳೆಯ ಸ್ಥಾನಮಾನ ನೀಡೋಣ ಎಂದಿದ್ದಾರೆ ಎನ್ನಲಾಗುತ್ತಿದೆ.