ಕೋಲಾರ: ಮುಂಬರುವ ಲೋಕಸಭಾ ಚುನಾವಣೆ (Lok Sabha Elections 2024) ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಕ್ಷೇತ್ರ ಲೆಕ್ಕಾಚಾರದಲ್ಲಿ ಹಲವು ನಾಯಕರಿಗೆ ಆತಂಕ ಕಾಡುತ್ತಿದೆ.
ಜೆಡಿಎಸ್ ಗೆ ಬಿಜೆಪಿ ಯಾವ ಕ್ಷೇತ್ರಗಳನ್ನು ಬಿಟ್ಟು ಕೊಡಲಿದೆ ಎಂಬ ಕುತೂಹಲ ಮನೆ ಮಾಡಿದ್ದು, ಹಾಲಿ ಸಂಸದರನ್ನು ಹೊಂದಿರುವ ಕೋಲಾರ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಜೆಡಿಎಸ್ಗೆ ಬಿಟ್ಟು ಕೊಡಲು ಬಿಜೆಪಿ ತೀರ್ಮಾನಿಸಿದೆ ಎಂಬ ಮಾಹಿತಿ ಸಿಕ್ಕಿದೆ.
ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ ಈ ಕುರಿತು ಹೇಳಿದ್ದು, ಹಾಲಿ ಸಂಸದ ಮುನಿಸ್ವಾಮಿ ಅವರಿಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲ ಎಂಬ ಚರ್ಚೆ ಶುರುವಾಗಿವೆ. ಅಲ್ಲದೇ, ಕುಮಾರಸ್ವಾಮಿ ಅವರು ಪ್ರಮುಖರ ಸಭೆ ನಡೆಸಿ, ಕೋಲಾರ ಲೋಕಸಭಾ ಕ್ಷೇತ್ರದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಈ ಜಿಲ್ಲೆಯಲ್ಲಿ ಮೂವರು ಶಾಸಕರು ಇರುವ ಹಿನ್ನೆಲೆಯಲ್ಲಿ ದಲಿತ ನಾಯಕರೊಬ್ಬರನ್ನು ಗೆಲ್ಲಿಸುವ ಕುರಿತು ಚರ್ಚೆಗಳು ಆರಂಭವಾಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರದಿಂದ ಜೆಡಿಎಸ್ ನಿಂದ ಮೂವರ ಹೆಸರು ಕೂಡ ಅಂತಿಮವಾಗಿವೆ ಎನ್ನಲಾಗಿದೆ. ಮುಳಬಾಗಿಲು ಶಾಸಕ ಸಂಮೃದ್ದಿ ಮಂಜುನಾಥ್, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ, ಬಂಗಾರಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಮಲ್ಲೇಶ್ ಬಾಬು ಹೆಸರುಗಳು ಕೇಳಿ ಬರುತ್ತಿವೆ.