ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಕಳೆದ ಏಪ್ರಿಲ್ 23ರಿಂದ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಇಳಿದಿದ್ದ ತಾರಾ ಕುಸ್ತಿಪಟುಗಳ ಪೈಕಿ ಕೆಲವರು ಇದೀಗ ಕರ್ತವ್ಯಕ್ಕೆ ಮರಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ ಹಿಂಪಡೆಯಲಾಗಿದೆ ಎಂಬ ವದಂತಿ ವೈರಲ್ ಆಗಿದ್ದು, ಪ್ರತಿಭಟನೆ ಕೈಬಿಟ್ಟಿಲ್ಲ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ತಾರಾ ಕುಸ್ತಿಪಟುಗಳು ಸ್ಪಷ್ಟನೆ ನೀಡಿದ್ದಾರೆ. ತಾರಾ ಕುಸ್ತಿಪಟುಗಳಾದ ಭಜರಂಗ್ ಪುನಿಯಾ, ಸಾಕ್ಷಿ ಮಲ್ಲಿಕ್ ಮತ್ತು ವಿನೀಶ್ ಪೋಟ್ ಭಾರತೀಯ ರೈಲ್ವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉತ್ತರ ರೈಲ್ವೆ ಕೇಂದ್ರ ಮಾಹಿತಿ ಪ್ರಕಾರ, ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಮೇ 31ರಿಂದಲೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.
ಯಾವ ಕುಸ್ತಿಪಟುಗಳೂ ಹೋರಾಟದಿಂದ ಹಿಂದೆ ಸರಿದಿಲ್ಲ . ನಾವು ನ್ಯಾಯಕ್ಕಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಒಲಿಂಪಿಕ್ಸ್ ಪದಕ ವಿಜೇತರಾದ ಸಾಕ್ಷಿ ಮಲ್ಲಿಕ್ ಮತ್ತು ಭಜರಂಗ್ ಪುನಿಯಾ ಸ್ಪಷ್ಟನೆ ನೀಡಿದ್ದಾರೆ. ಪ್ರತಿಭಟನಾನಿರತ ಕುಸ್ತಿಪಟುಗಳು ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆದಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.
ಈ ಕುರಿತು ಸಾಕ್ಷಿ ಮಲ್ಲಿಕ್, ಇದೆಲ್ಲಾ ಸುಳ್ಳು ಸುದ್ದಿಗಳು. ನ್ಯಾಯಕ್ಕಾಗಿ ಹೋರಾಡುತ್ತಿರುವ ಹೋರಾಟದಲ್ಲಿ ನಾವು ಯಾರೂ ಹಿಂದೆ ಸರಿದಿಲ್ಲ. ಸತ್ಯಾಗ್ರಹದ ಜತೆ ರೈಲ್ವೆಯಲ್ಲೂ ನಾನು ಉದ್ಯೋಗದಲ್ಲಿದ್ದೇನೆ. ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ. ದಯವಿಟ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಮನವಿ ಮಾಡಿದರು. ಎïಐಆರ್ ಹಿಂದಕ್ಕೆ ಪಡೆದಿದ್ದೇವೆ ಎನ್ನುವುದು ಸುಳ್ಳು ಸುದ್ದಿ . ನಮಗೆ ಹಾನಿ ಮಾಡಲು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಮಹಿಳಾ ಕುಸ್ತಿಪಟುಗಳು ಎಫ್ಐಆರ್ ಹಿಂದಕ್ಕೆ ಪಡೆದಿದ್ದಾರೆ ಎನ್ನುವುದು ಸುಳ್ಳು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಎಂದು ಭಜರಂಗ್ ಟ್ವೀಟ್ ಮಾಡಿದ್ದಾರೆ.