ರಾಯಚೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ತಾರಕಕ್ಕೇರಿದ್ದು, ಇವರಿಬ್ಬರ ಮುಸುಕಿನ ಗುದ್ದಾಟದಲ್ಲೇ ರಾಜ್ಯ ಸರ್ಕಾರ ಪತನವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ರಾಯಚೂರಿನಲ್ಲಿ ಡಾ.ನಾಗರಾಜ ಬಾಲ್ಕಿ ಅವರ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಖರಿ, ಆಂತರಿಕ ಕಚ್ಚಾಟ ಹಾಗೂ ಭ್ರಷ್ಟಾಚಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕುರ್ಚಿ ಕಾದಾಟದಲ್ಲಿ ಸರ್ಕಾರ ಪತನ?
ಕಾಂಗ್ರೆಸ್ ಪಕ್ಷದ ಒಳಜಗಳದ ಬಗ್ಗೆ ಮಾತನಾಡಿದ ಯತ್ನಾಳ್, ಸಿದ್ದರಾಮಯ್ಯ ಕುರ್ಚಿ ಬಿಡಲು ತಯಾರಿಲ್ಲ, ಇತ್ತ ಡಿ.ಕೆ. ಶಿವಕುಮಾರ್ ಸುಮ್ಮನೆ ಕೂರುತ್ತಿಲ್ಲ. ಇವರಿಬ್ಬರ ನಡುವಿನ ಅಧಿಕಾರದ ಹಗ್ಗಜಗ್ಗಾಟ ಮುಗಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಆಡಳಿತ ಪಕ್ಷದ ಈ ಇಬ್ಬರು ಪ್ರಬಲ ನಾಯಕರ ಜಗಳದ ಪರಿಣಾಮವಾಗಿ ಸರ್ಕಾರವೇ ಉರುಳುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದರು.
ದಲಿತ ಸಿಎಂ ಅಸಾಧ್ಯದ ಮಾತು
ಕಾಂಗ್ರೆಸ್ ಸರ್ಕಾರದಲ್ಲಿ ದಲಿತ ಮುಖ್ಯಮಂತ್ರಿಯ ಚರ್ಚೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ವ್ಯಂಗ್ಯವಾಗಿ ಉತ್ತರಿಸಿದ ಯತ್ನಾಳ್, ಕಾಂಗ್ರೆಸ್ ಪಕ್ಷದಲ್ಲಿ ದಲಿತರು ಸಿಎಂ ಆಗುವುದು ಅಸಾಧ್ಯದ ಮಾತು. ಇತಿಹಾಸ ನೋಡಿದರೆ ಇದು ತಿಳಿಯುತ್ತದೆ. ಕೆಪಿಸಿಸಿ ಅಧ್ಯಕ್ಷರಾಗಿದ್ದ ಎಸ್.ಎಂ. ಕೃಷ್ಣ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ಆದರೆ, ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ಅಧ್ಯಕ್ಷರಿದ್ದಾಗ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಲಾಯಿತು. ಖರ್ಗೆಯಂತಹ ಹಿರಿಯ ನಾಯಕರಿಗೇ ಮೋಸ ಮಾಡಿದ ಪಕ್ಷದಲ್ಲಿ, ಈಗ ಬೇರೆ ದಲಿತ ನಾಯಕರಿಗೆ ಮಣೆ ಹಾಕುತ್ತಾರೆ ಎನ್ನುವುದು ಭ್ರಮೆ. ಸದ್ಯ ಸಿಎಂ ಮತ್ತು ಡಿಸಿಎಂ ನಡುವಿನ ಜಗಳವೇ ಬಗೆಹರಿಯುತ್ತಿಲ್ಲ, ಇನ್ನು ಮೂರನೇಯವರಿಗೆ ಅವಕಾಶ ಎಲ್ಲಿ ಸಿಗುತ್ತದೆ ಎಂದು ಪ್ರಶ್ನಿಸಿದರು.
ದಾಖಲೆ ಮುರಿದ ಭ್ರಷ್ಟಾಚಾರ
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಕೇವಲ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದರು. ನಾನು ವಿಧಾನಸಭೆಯಲ್ಲೇ ಮುಖ್ಯಮಂತ್ರಿಗಳ ಮುಖಕ್ಕೆ ಹೇಳಿದ್ದೇನೆ. ನೀವು ದೀರ್ಘಕಾಲ ಸಿಎಂ ಆಗಿ ದೇವರಾಜ ಅರಸು ಅವರ ದಾಖಲೆ ಮುರಿದಿರಬಹುದು, ಅತಿ ಹೆಚ್ಚು ಬಜೆಟ್ ಮಂಡಿಸಿರಬಹುದು. ಆದರೆ, ರಾಜ್ಯ ಕಂಡ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಂಡು ಹೋಗಬೇಡಿ ಎಂದು ಎಚ್ಚರಿಸಿದ್ದೇನೆ ಎಂದರು.
ಯಾವುದೇ ಇಲಾಖೆಯ ಮೇಲೆ ಹಿಡಿತವಿಲ್ಲ, ಲಂಚವಿಲ್ಲದೆ ಕೆಲಸಗಳಾಗುತ್ತಿಲ್ಲ. ಅಭಿವೃದ್ಧಿಗೆ ಬಿಡಿಗಾಸು ಹಣವಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಕೂಡ ಸರ್ಕಾರದ ಬಳಿ ಹಣವಿರುವುದಿಲ್ಲ ಎಂದು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಉದ್ಯೋಗ ಸೃಷ್ಟಿಯೇ ಬಡತನಕ್ಕೆ ಪರಿಹಾರ
ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರಸ್ತಾಪಿಸಿದ ಯತ್ನಾಳ್, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 2.80 ಲಕ್ಷ ಹುದ್ದೆಗಳು ಖಾಲಿ ಬಿದ್ದಿವೆ. ಪೊಲೀಸ್ ಇಲಾಖೆಯೊಂದರಲ್ಲೇ 20,000 ಹುದ್ದೆಗಳಿವೆ, ಶಾಲೆಗಳಲ್ಲಿ ಶಿಕ್ಷಕರಿಲ್ಲ, ಪಂಚಾಯ್ತಿಗಳಲ್ಲಿ ಪಿಡಿಒಗಳಿಲ್ಲ. ಸರ್ಕಾರ ಕೇವಲ ಭಾಗ್ಯಗಳ ಹೆಸರಿನಲ್ಲಿ ಕಾಲಹರಣ ಮಾಡುವ ಬದಲು, ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿದರೆ ಸುಮಾರು 2.80 ಲಕ್ಷ ಕುಟುಂಬಗಳು ಆರ್ಥಿಕವಾಗಿ ಸಬಲವಾಗುತ್ತವೆ. ಆಗ ಅವರಿಗೆ ಬಿಪಿಎಲ್ ಕಾರ್ಡ್ ಅಥವಾ ಉಚಿತ ರೇಷನ್ ಅಗತ್ಯವೇ ಇರುವುದಿಲ್ಲ. ಸರ್ಕಾರ ಮೊದಲು ಯುವಕರಿಗೆ ಉದ್ಯೋಗ ನೀಡಲಿ, ಆನಂತರ ಉಳಿದ ಬಡವರಿಗೆ ರೇಷನ್ ಕೊಡಲಿ ಎಂದು ಸಲಹೆ ನೀಡಿದರು.







